ತರೀಕೆರೆ: ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ನಿವಾಸಿ ದಿನೇಶ್ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು ೧೨.೨೫೦ ಕೆ.ಜಿ. ತೂಕದ ಹಸಿ ಗಾಂಜಾವನ್ನು ತರೀಕೆರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಿಎಸ್ಐ ಆನಂದ್ ಡಿ. ಪಾವಸ್ಕರ್ ಅವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಸ್ವಯಂ ದೂರು ದಾಖಲಿಸಿಕೊಂಡು, ಮೇಲಧಿಕಾರಿಗಳ ಸೂಚನೆಯಂತೆ ವಿಶೇಷ ತಂಡ ರಚಿಸಲಾಗಿತ್ತು. ಬಳಿಕ ತಂಡವು ತರೀಕೆರೆ ತಹಶೀಲ್ದಾರ್ ರಶ್ಮಿ ಎಚ್.ಜೆ. ಅವರ ಸಮಕ್ಷಮದಲ್ಲಿ ಗೌರಮ್ಮ ಛತ್ರದ ಹಿಂಭಾಗದಲ್ಲಿರುವ ದಿನೇಶ್ ಅವರ ಮನೆ ಮೇಲೆ ದಾಳಿ ನಡೆಸಿ, ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಹಸಿ ಗಾಂಜಾವನ್ನು ವಶಪಡಿಸಿಕೊಂಡಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಪ್ರಕರಣದ ಆರೋಪಿ ದಿನೇಶ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪ್ರತ್ಯೇಕ ಪೊಲೀಸ್ ತಂಡವನ್ನು ರಚಿಸಲಾಗಿದೆ. ಆರೋಪಿಯ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ. ಜಯಕುಮಾರ್ ಹಾಗೂ ತರೀಕೆರೆ ಡಿವೈಎಸ್ಪಿ ಪರಶುರಾಮಪ್ಪ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ತರೀಕೆರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ, ಪಿಎಸ್ಐಗಳಾದ ಆನಂದ್ ಪಾವಸ್ಕರ್ ಹಾಗೂ ಸಿಬ್ಬಂದಿಗಳಾದ ರಾಮಪ್ಪ, ದಿನೇಶ್, ಕಿರಣ್ ಕುಮಾರ್, ಮಧು ಬಿ.ಜಿ., ಹರೀಶ್, ಚಂದ್ರಶೇಖರ್, ಮೋಹನ್ ಮತ್ತು ಶ್ರೀನಿವಾಸ್ ಅವರು ವಿವಿಧ ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಪೊಲೀಸ್ ತಂಡದ ಕಾರ್ಯವನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
12250 kg of raw cannabis grown behind the house seized
Leave a comment