ಚಿಕ್ಕಮಗಳೂರು: ಆಧುನಿಕ ಶಿಲ್ಪಿ ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರುರವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಕೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಸಲಹೆ ನೀಡಿದರು.
ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಜಿಲ್ಲಾ, ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜವಾಹರ್ ಬಾಲ್ ಮಂಚ್ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ೧೩೫ ನೆಯ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ನೆಹರುರವರು ನವಭಾರತದ ಸಂಕಲ್ಪವನ್ನು ಹೊತ್ತು ಪ್ರಧಾನಮಂತ್ರಿಯಾಗಿ ಭಾರತವನ್ನು ಸದೃಢವಾಗಿ ಮುನ್ನಡೆಸಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ, ೯ ವರ್ಷಗಳ ಕಾಲ ಜೈಲು ವಾಸವನ್ನು ಅನುಭವಿಸಿ, ಭಾರತದ ವಿದೇಶಾಂಗ ನೀತಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಹೇಳಿದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಸಿದ್ಧಾಂತವೇ ಸಂವಿಧಾನವಾಗಿದೆ. ಜಾತ್ಯಾತೀತ ನೆಲೆಗಟ್ಟಿನಲ್ಲಿ ಸಂವಿಧಾನಕ್ಕೆ ಗೌರವವನ್ನು ಕೊಡಲಾಗುತ್ತಿದೆ. ದೇಶವು ಪ್ರಗತಿ ಕಾಣಲು ನೆಹರು ಕಾರಣವಾಗಿದ್ದಾರೆ. ದೇಶ ಮತ್ತು ಹೊರದೇಶಗಳ ಸಂಬಂಧಗಳನ್ನು ಸುಧಾರಿಸುವಲ್ಲಿ ಯಶಸ್ಸು ಕಂಡ ಧೀಮಂತ ನಾಯಕ ನೆಹರು ಎಂದು ಬಣ್ಣಿಸಿದರು.
ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಮುಖಂಡ ಸಿ.ಟಿ.ಶಿವರಾಂ ಮಾತನಾಡಿ, ನೆಹರುರವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ. ಅಧಿಕಾರವಧಿಯಲ್ಲೂ ಮಕ್ಕಳ ಜೊತೆ ಬೆರೆತು ಅವರೊಂದಿಗೆ ಅನ್ಯೋನತೆಯಿಂದ ಕಾಲ ಕಳೆಯುತ್ತಿದ್ದರು. ಅವರ ಆದರ್ಶ ಮೌಲ್ಯಗಳನ್ನು ನಾವುಗಳು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ತನೋಜ್ ಕುಮಾರ್ ನಾಯ್ಡು ಮಾತನಾಡಿ, ನೆಹರುರವರು ಹಾಕಿಕೊಟ್ಟಿರುವ ಹಾದಿಯಲ್ಲಿ ಯುವ ಜನಾಂಗ ಸಾಗಬೇಕು. ಅವರ ಅಧಿಕಾರವಧಿಯಲ್ಲಿ ರೈತರಿಗೆ, ಯುವಜನಾಂಗಕ್ಕೆ ಉತ್ತಮವಾದ ಕಾರ್ಯಗಳನ್ನು ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಜವಾಹರ್ ಬಾಲ್ ಮಂಚ್ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಪರಮೇಶ್ ರಾಜ್ ಅರಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಪ್ರಧಾನಮಂತ್ರಿಯಾಗಿ ಆಡಳಿತ ನಡೆಸಿದ ನೆಹರುರವರು ಉತ್ತಮವಾದ ಕೊಡುಗೆಗಳನ್ನು ನೀಡಿದ್ದಾರೆ. ಅವರ ಜನ್ಮ ದಿನಾಚರಣೆಯನ್ನು ಪ್ರತಿದಿನ ನೆನೆಸುವಂತಾಗಬೇಕು ಎಂದು ತಿಳಿಸಿದರು.
ಜವಾಹರಲಾಲ್ ನೆಹರುರವರ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕವಾಗಿ ಪುಷ್ಪಾರ್ಚನೆ ಮಾಡಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಶೃದೀಪ್ ಎ, ರಾಘವೇಂದ್ರ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ್ ಕುಮಾರ್, ಮುಖಂಡರಾದ ಬಿ.ಎಸ್.ಉಮೇಶ್, ತಂಬಿ, ಜನಾರ್ಧನ್, ಜಿಯಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
135th Birth Anniversary of Pandit Jawaharlal Nehru
Leave a comment