ಮೂಡಿಗೆರೆ: ಕಾನೂನು ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಗುರುವಾರ 16 ಪ್ರಕರಣಗಳನ್ನು ದಾಖಲಿಸಲಾಗಿದೆ.
ಚಾರ್ಮಾಡಿ ಘಾಟಿಯ ಜಲಪಾತಗಳ ಬಳಿ ಅಪಾಯಕಾರಿ ಸ್ಥಳಗಳಿಗೆ ಪ್ರವಾಸಿಗರು ತೆರಳುತ್ತಿರುವ ವರದಿ ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ಬೆನ್ನಲ್ಲೇ ಘಾಟಿಯಲ್ಲಿ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗಿದೆ.
ಬಣಕಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರೇಣುಕಾ ನೇತೃತ್ವದಲ್ಲಿ ಇಡೀ ದಿನ ಕಾರ್ಯಚರಣೆ ನಡೆಸಿ, ಕಾನೂನು ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿ 16 ಲಘು ಪ್ರಕರಣಗಳನ್ನು ದಾಖಲಿಸಿ, ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಯಿತು.
ಈ ವೇಳೆ ಮಾತನಾಡಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರೇಣುಕಾ, ‘ಘಾಟಿಯಲ್ಲಿ ಅಪಾಯಕಾರಿ ಸ್ಥಳಗಳಿಗೆ ತೆರಳದಂತೆ ಬ್ಯಾರಿಕೇಡ್ ಅಳವಡಿಸಿ, ಸೂಚನಾ ಫಲಕಗಳನ್ನು ಹಾಕಲಾಗಿದೆ. ರಸ್ತೆ ಬದಿ ವಾಹನ ಸವಾರರಿಗೆ ತೊಂದರೆಯಾಗದಂತೆ ವಾಹನಗಳನ್ನು ನಿಲುಗಡೆಗೊಳಿಸದಂತೆ ಸೂಚಿಸಲಾಗಿದೆ. ಕೆಲವು ವಾಹನಗಳನ್ನು ನಿಲುಗಡೆಗೆ ಸೂಕ್ತವಲ್ಲದ ಸ್ಥಳಗಳಲ್ಲಿ ನಿಲುಗಡೆಗೊಳಿಸಿದ್ದಕ್ಕೆ ಪ್ರಕರಣ ದಾಖಲಿಸಲಾಗಿದೆ.
ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ಯಾವುದೇ ಅನಾಹುತ ಸಂಭವಿಸಬಾರದು ಎಂಬುದೇ ಇಲಾಖೆಯ ಉದ್ದೇಶ ವಾಗಿದ್ದು, ಪ್ರಯಾಣಿಕರು ಹಾಗೂ ಪ್ರವಾಸಿಗರು ಕಾನೂನು ಉಲ್ಲಂಘನೆ ಮಾಡದೇ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದರು.
ಪ್ರಕರಣ ದಾಖಲು: ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಮನೆ ಗ್ರಾಮದ ಬಳಿ ನಡುರಸ್ತೆಯಲ್ಲೇ ಜನ್ಮ ದಿನ ಆಚರಿಸಿಕೊಳ್ಳುತ್ತಿದ್ದ 9 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರಿನ ಬೆಳ್ತಂಗಡಿ ವ್ಯಾಪ್ತಿಯ ಒಂಬತ್ತು ಜನರ ತಂಡವು ದೇವರಮನೆ ಬಳಿ ನಡುರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಕೇಕ್ ಕತ್ತರಿಸಿ, ಅಸಭ್ಯವಾಗಿ ವರ್ತಿಸುತ್ತ ಇರುವುದರ ಬಗ್ಗೆ ಬಂದ ದೂರನ್ನು ಆಧರಿಸಿ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Law violation at Charmadi Ghat: 16 cases registered
Leave a comment