Home Latest News ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ
Latest NewschikamagalurHomenamma chikmagalur

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Share
Share

ಚಿಕ್ಕಮಗಳೂರು:  ವಿದ್ಯಾರ್ಥಿಗಳು ಮತ್ತು ಯುವಜನತೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು ಎಂದು ಬಸವತತ್ವ ಪೀಠದ ಶ್ರೀ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ ಮಾಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ವಿದ್ಯಾರ್ಥಿ ದೆಸೆಯಲ್ಲಿ ಬಹಳಷ್ಟು ಆಕರ್ಷಣೆಗಳಿರುತ್ತವೆ. ಅವುಗಳ ಹಿಂದೆ ಹೋದರೆ ವಿದ್ಯಾಭ್ಯಾಸ ಮೊಟಕಾಗುತ್ತದೆ, ಬದುಕಿನ ಹಾದಿ ತಪ್ಪುತ್ತದೆ, ಜೀವನದ ಅಧಃಪತನವಾಗುತ್ತದೆ ಎಂದು ಎಚ್ಚರಿಸಿದರು.

ಇಂದು ಮಾದಕ ವಸ್ತುಗಳ ವ್ಯಾಪಾರಸ್ಥರು ವಿದ್ಯಾರ್ಥಿಗಳು ಮತ್ತು ಯುವಜನತೆಯನ್ನು ಗುರಿಯಾಗಿಸಿಕೊಂಡಿದ್ದಾರೆ, ಮೊಬೈಲ್‌ಗಳಲ್ಲೇ ಜೂಜಾಟದ ಆಪ್‌ಗಳಿವೆ, ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಯುವಜನತೆಗೆ ಜೂಜಾಟವಾಡುವಂತೆ ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರಾತುಗಳ ಮೂಲಕ ಬಹಿರಂಗವಾಗಿಯೇ ಪ್ರೇರೇಪಿಸುತ್ತಿದ್ದಾರೆ, ಅಂಗಡಿಗಳಲ್ಲಿ ಗುಟ್ಕಾ, ತಂಬಾಕು, ಸಿಗರೇಟು, ಬೀಡಿ, ಮದ್ಯದಂತಹ ರಕ್ತ ಬೀಜಾಸುರರು ರಾರಾಜಿಸುತ್ತಿದ್ದಾರೆ, ವಿದ್ಯಾರ್ಥಿಗಳು ಮತ್ತು ಯುವಜನತೆ ಇವುಗಳ ವಿಷಯದಲ್ಲಿ ಅತ್ಯಂತ ಜಾಗರೂಕರಾಗಿರಬೇಕು, ಉತ್ತಮ ಭವಿಷ್ಯಕ್ಕಾಗಿ ಅವುಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.

ಭವಿಷ್ಯದ ಜೀವನ ಉಜ್ವಲವಾಗಬೇಕಾದರೆ ಇಂದಿನ ವರ್ತಮಾನದಲ್ಲಿ ನಮ್ಮ ನಡತೆ ಉತ್ತಮವಾಗಿರಬೇಕು, ಪ್ರತಿಭಾ ಪುರಸ್ಕಾರ ಎನ್ನುವುದು ಕೇವಲ ಬೆನ್ನು ತಟ್ಟುವುದು ಎಂಬುದನ್ನು ವಿದ್ಯಾರ್ಥಿಗಳು ಅರಿಯಬೇಕು, ಪ್ರತಿಭಾ ಪುರಸ್ಕಾರ, ಸನ್ಮಾನಗಳಿಂದ ಮೈಮರೆಯಬಾರದು. ಯಾವುದೇ ಭ್ರಮೆಗೊಳಗಾಗದೆ ಮುಂದಿನ ಶಿಕ್ಷಣವನ್ನು ಶ್ರದ್ಧೆ ಮತ್ತು ಪರಿಶ್ರಮದಿಂದ ಮಾಡಬೇಕು ಎಂದು ತಿಳಿ ಹೇಳಿದರು.

ವಿದ್ಯಾರ್ಥಿಗಳು ಮತ್ತು ಯುವಜನತೆ ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಶಿಕ್ಷಣವಂತರಾಗುವುದರ ಜೊತೆಗೆ ಸಂಸ್ಕಾರವಂತರೂ ಆಗಬೇಕು, ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವುದರಿಂದ ಇನ್ನೂ ಹೆಚ್ಚಿನ ಸಾಧನೆಗೆ ಅವರನ್ನು ಪ್ರೇರೇಪಿಸಿದಂತಾಗುತ್ತದೆ ಎಂದು ತಿಳಿಸಿ ಸಖರಾಯಪಟ್ಟಣದ ಅವಧೂತರು ಹೇಳುತ್ತಿದ್ದ ಹಾಗೆ ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕೆ ಆಕರ್ಷಿತರಾಗದೇ ಶ್ರದ್ಧೆ, ಶಿಸ್ತು, ಪರಿಶ್ರಮದಿಂದ ಗುರಿ ಸಾಧಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಪರಿಸ್ಥಿತಿಯಲ್ಲೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು, ಒಂದು ಅವಕಾಶ ತಪ್ಪಿದರೆ ಇನ್ನೊಂದು ಅವಕಾಶದ ಬಾಗಿಲು ತೆರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ತಿಳಿಸಿದರು.

ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಅಂಕ ಗಳಿಕೆ ಮುಖ್ಯವಲ್ಲ. ಯಾವುದೇ ಕಪ್ಪುಚುಕ್ಕೆ ಇಲ್ಲದೇ ಬದುಕುವುದು ಮುಖ್ಯ ಎಂದು ತಿಳಿಸಿ ಸರ್ಕಾರಿ ನೌಕರರು, ಅಧಿಕಾರಿಗಳು ರೈತ ಪರ ಮತ್ತು ಬಡವರ ಪರವಾಗಿರಬೇಕು, ರೈತರು ಸಹಾಯ ಕೇಳಿ ಬಂದಾಗ ಅವರನ್ನು ಕೂರಿಸಿ ಮಾತನಾಡಿಸಬೇಕು, ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ತಾವು ಸಂಘದ ಅಧ್ಯಕ್ಷರಾದ ನಂತರ ಕಳೆದ ೫ ವರ್ಷಗಳಿಂದ ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ, ಕಳೆದ ೫ ವರ್ಷಗಳಲ್ಲಿ ೫೦ ಸಾವಿರ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡಲಾಗಿದೆ, ಪ್ರತಿವರ್ಷ ರಾಜ್ಯಾದ್ಯಂತ ೧೦ ಸಾವಿರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ ಎಂದ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನೇ ಮುಂದುವರೆಸುವ ಕುರಿತು ಸರ್ಕಾರದೊಂದಿಗೆ ಅನೇಕ ಬಾರಿ ಚರ್ಚಿಸಲಾಗಿದ್ದು, ಹಳೆ ಪಿಂಚಣಿ ಯೋಜನೆ ಆದಷ್ಟು ಶೀಘ್ರವಾಗಿ ಜಾರಿಗೆ ಬರಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಸದ್ಯದಲ್ಲೇ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಯಾಗಲಿದೆ, ರಾಜ್ಯದ ೫ ಲಕ್ಷ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರು ಸೇರಿ ೨೫ ಲಕ್ಷ ಜನ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಹೇಳಿದರು.
ನಗರದಲ್ಲಿ ನಿರ್ಮಿಸಿರುವ ಸರ್ಕಾರಿ ನೌಕರರ ಭವನದ ಅಭಿವೃದ್ಧಿಗೆ ಅನುದಾನ ನೀಡುವಂತೆ ವೇದಿಕೆಯಲ್ಲಿದ್ದ ಶಾಸಕರಾದ ಸಿ.ಟಿ.ರವಿ ಮತ್ತು ಎಚ್.ಡಿ. ತಮ್ಮಯ್ಯ ಅವರಿಗೆ ಮನವಿ ಮಾಡಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಮಾತನಾಡಿ ನಗರದಲ್ಲಿ ಸರ್ಕಾರಿ ನೌಕರರ ಭವನದ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ ಒದಗಿಸಿದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ೫೭೯ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಸರ್ಕಾರಿ ನೌಕರರ ಸಂಘದ ಹಾಸನ ಜಿಲ್ಲೆ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ, ರಾಜ್ಯ ಖಜಾಂಚಿ ವಿ.ವಿ. ಶಿವರುದ್ರಯ್ಯ, ಗೌರವಾಧ್ಯಕ್ಷ ಎಸ್.ಬಸವರಾಜು, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ.ಬಳ್ಳಾರಿ, ಹಿರಿಯ ಉಪಾಧ್ಯಕ್ಷರಾದ ಸುರೇಶ ಸಿ.ಶಡಶ್ಯಾಳ, ಆರ್.ಮೋಹನ್‌ಕುಮಾರ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನ ಉಪಸ್ಥಿತರಿದ್ದರು

Distribution of Pratibha Puraskar to children of government employees

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...