ಚಿಕ್ಕಮಗಳೂರು: ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಂದ ಜಿಲ್ಲಾಧಿಕಾರಿಗಳ ಮೂಲಕ ಆದಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಕೆ ಮಾಡಲಾಗುತ್ತಿದೆ ಎಂದು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ ಗೌಡ್ಲು ತಿಳಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಹಾಗೂ ಇತರೆ ಕಾರಣಗಳಿಂದಾಗಿ ವಿಶ್ವ ಆದಿವಾಸಿ ದಿನಾಚರಣೆ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ನಮ್ಮ ಬೇಡಿಕೆಗಳನ್ನೊಳಗೊಂಡ ಮನವಿ ಸಲ್ಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ 49 ಪರಿಶಿಷ್ಟ ಪಂಗಡಗಳನ್ನು ಒಳಗೊಂಡಂತೆ ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರತ್ಯೇಕಿಸಿ ಸ್ಥಾಪಿಸಬೇಕು. ಈ ಅಭಿವೃದ್ಧಿ ನಿಗಮದ ಮೂಲಕ ಜಿಲ್ಲಾವಾರು ಮತ್ತು ಬುಡಕಟ್ಟುವಾರು ಆದಿವಾಸಿ ಪರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅರಣ್ಯ ಹಕ್ಕು ಕಾಯ್ದೆ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಿ ಅನುಷ್ಠಾನಗೊಳಿಸಬೇಕು. ಇತ್ತೀಚೆಗೆ ರಾಜ್ಯ ಸರ್ಕಾರದ ಅರಣ್ಯ ಇಲಾಖೆಯು ಅರಣ್ಯ ಹಕ್ಕು ಕಾಯ್ದೆ ಉಲ್ಲಂಘನೆ ಮಾಡಿದ ಆದೇಶವನ್ನು ಹಿಂಪಡೆದು, ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆ ಸಂರಕ್ಷಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರದಿಂದಲೇ ವಿಶ್ವ ಆದಿವಾಸಿ ದಿನಾಚರಣೆ ಆಚರಿಸಬೇಕು. ಈ ದಿನದಂದು ಆದಿವಾಸಿ ಸಾಧಕರನ್ನು ಗುರುತಿಸಿ ಆದಿವಾಸಿ ಸಿರಿ, ಧರತಿ ಆಬಾ ಬಿರಸಾ ಮುಂಡಾ ಎಂಬ ಹೆಸರಿನಡಿ ಪ್ರಶಸ್ತಿ ನೀಡಿ ಗೌರವಿಸಬೇಕು. ಬುಡಕಟ್ಟುಗಳ ಸಾಂಸ್ಕೃತಿಕ, ಸಾಹಿತ್ಯಿಕ ಸಂಘಟನೆಗಾಗಿ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಆದಿವಾಸಿ ಭವನಗಳನ್ನು ಸರ್ಕಾರವೇ ಕಟ್ಟಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು. ಪಶ್ಚಿಮಘಟ್ಟ ಪ್ರದೇಶದಲ್ಲಿನ ಲೈನ್ ಮನೆಗಳಲ್ಲಿರುವ ಜೀತದ ಆದಿವಾಸಿಗಳ ಸಮೀಕ್ಷೆ ಮಾಡಿ ಅವರಿಗೆ ಸಮಗ್ರ ಪುನರ್ ವಸತಿ ಕಲ್ಪಿಸಬೇಕು ಎಂದು ಮನವಿ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ ಎಂದರು.
ರಾಜ್ಯದ ಮೂಲ ಬುಡಕಟ್ಟುಗಳ ಅರಣ್ಯ ಹಕ್ಕುಗಳನ್ನು ಸಂರಕ್ಷಿಸಲು ಪಶ್ಚಿಮ ಘಟ್ಟ ಪ್ರದೇಶವನ್ನು ಸಂವಿಧಾನದ ಆರನೇ ಅನುಸೂಚಿಯಲ್ಲಿ ಸೇರಿಸಲು ರಾಜ್ಯ ಸರ್ಕಾರ ಭಾರತ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಲ್ಯಾಂಪ್ಸ್ ಕಿರು ಅರಣ್ಯ ಉತ್ಪನ್ನಗಳಿಗೆ ಬೇರೆಬೇರೆ ರಾಜ್ಯಗಳು ಬೆಂಬಲ ಬೆಲೆ ನೀಡುವಂತೆ ಕರ್ನಾಟಕದ ರಾಜ್ಯ ಸರ್ಕಾರವು ಬೆಂಬಲ ಬೆಲೆ ನೀಡಬೇಕು. ಜೊತೆಗೆ 2026-27ನೇ ಸಾಲಿನ ಆಯವ್ಯಯದಲ್ಲಿ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಆದಿವಾಸಿಗಳ ಕೇಂದ್ರಿತ ಉನ್ನತ ಮತ್ತು ಸಮಗ್ರ ಅಧ್ಯಯನಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬುಡಕಟ್ಟು ವಿಶ್ವವಿದ್ಯಾಲಯವನ್ನು ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದ ಜಿಲ್ಲೆಯೊಂದರಲ್ಲಿ ಆರಂಭಿಸಬೇಕು. ಆದಿವಾಸಿ ಮಕ್ಕಳ ವಿದ್ಯಾರ್ಜನೆಗಾಗಿ ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ಆರಂಭಿಸಲು ಭಾರತ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ಮನವಿ ಮೂಲಕ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೇಶ್, ಪ್ರಮುಖರಾದ ವಿಜಯೇಂದ್ರ, ಮುಜೇಕಾನ್ ಅನಿಲ್ ಕುಮಾರ್, ಕೆ.ಎಲ್.ಕುಮಾರ್, ನಾಗರತ್ನ, ಭವಾನಿ, ಚಂದ್ರು ಮತ್ತಿತರರಿದ್ದರು.
World Indigenous Peoples Day
Leave a comment