ಚಿಕ್ಕಮಗಳೂರು: ಪದವಿ ಪೂರೈಸಿರುವ ಎಲ್ಲ ಪ್ರಾಥಮಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದನಾಮೀಕರಿಸಬೇಕು ಎಂದು ಆಗ್ರಹಿಸಿ ಆ.೧೨(ಇಂದಿನಿಂದ) ಹಂತಹಂತವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿರಣ್ಕುಮಾರ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೧೭ ರವರೆಗೆ ನೇಮಕವಾದ ಶಿಕ್ಷಕರನ್ನು ೧ ರಿಂದ ೭ ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಉಲ್ಲೇಖ (೧) ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, ೨೦೧೭ ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಎಂದು ಒತ್ತಾಯಿಸಿದರು.
ಯಾವುದೇ ಕಾರಣಕ್ಕೂ ೨೦೧೬ ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವನ್ವಯಗೊಳಿಸಬಾರದು. ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದನಾಮೀಕರಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು.
ಕಳೆದ ವರ್ಷ ಇದೇ ಸಂದರ್ಭದಲ್ಲಿ ಈ ನಮ್ಮ ಬೇಡಿಕೆ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುವ ಬಗ್ಗೆ ಸ್ಪಷ್ಟ ಭರವಸೆ ನೀಡಿದ್ದರು. ಆದರೆ ಈವರೆಗೂ ಭರವಸೆ ಈಡೇರಲೇ ಇಲ್ಲ. ಹೀಗಾಗಿ ಇತ್ತೀಚೆಗೆ ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ರಾಜ್ಯ ಕಾರ್ಯಾಕಾರಿ ಸಭೆಯಲ್ಲಿ ನಿರ್ಣಯಿಸಿದಂತೆ ಬೇಡಿಕೆ ಈಡೇರಿಕೆಗೆ ಹಂತಹತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಆ.೧೨ ರಂದು ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಅಥವಾ ಜಿ.ಪಂ ಸಿಇಒ ಮೂಲಕ ಸರಕಾರಕ್ಕೆ ಬೇಡಿಕೆ ಸಂಬಂಧ ಮನವಿ ಸಲ್ಲಿಸುವುದು, ಆ.೨೫ ರಂದು ಬೇಡಿಕೆ ಈಡೇರಿಕೆಗೆ ಆಗ್ರಹಿಸುವುದು. ಆ.೨೬ ರಂದು ಸರಕಾರ ಮತ್ತು ಇಲಾಖೆಗೆ ಹೋರಾಟದ ಬಗ್ಗೆ ಪತ್ರ ರವಾನಿಸುವುದು. ಆ.೨೭ ರೊಳಗೆ ಬೇಡಿಕೆ ಈಡೇರದಿದ್ದರೆ ಸೆ.೩ ರಂದು ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಎಲ್ಲ ಶಿಕ್ಷಕರು ಸಾಂದರ್ಭಿಕ ರಜೆ ಪಡೆದು ಫ್ರೀಡಂಪಾರ್ಕ್ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ ಎಂದು ಎಚ್ಚರಿಸಿದರು.
ಸೆ.೪ ಮತ್ತು ೫ ರಂದು ಆಹೋರಾತ್ರಿ ಧರಣಿ ನಡೆಸಲಾಗುವುದು. ಫ್ರೀಡಂ ಪಾರ್ಕಿನಲ್ಲೇ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಪದವೀಧರ ಶಿಕ್ಷಕರಿಗೆ ನ್ಯಾಯ ಸಿಗುವವರೆಗೂ ಹೋರಾಟವನ್ನು ನಿರಂತರವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅನ್ಯ ಕಾರ್ಯಗಳಿಂದ ಹಾಗೂ ಆನ್ಲೈನ್ ಕೆಲಸಗಳಿಂದ ಶಿಕ್ಷಕರಮೇಲೆ ಆಗುತ್ತಿರುವ ಒತ್ತಡ ಕಡಿಮೆ ಮಾಡಬೇಕು ಎಂಬುದು ನಮ್ಮ ಮತ್ತೆರಡು ಬೇಡಿಕೆಗಳಾಗಿವೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶೀಕ್ಷಕರ ಸಂಘದ ಪದಾಕಾರಿಗಳಾದ ಮಂಜುನಾಥ, ಅಜ್ಜಯ್ಯ, ಹರೀಶ್, ಬೈರೇಗೌಡ, ಬಸಪ್ಪ, ಕುಮಾರಪ್ಪ, ಪುಟ್ಟಸ್ವಾಮಿ, ಶ್ರೀನಿವಾಸ್, ನವೀನ್ ಮತ್ತಿತರರಿದ್ದರು.
Phased protest for primary school teachers’ demands
Leave a comment