Home namma chikmagalur ಹಿಂದುಳಿದ ವರ್ಗಗಳ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಸಹಕರಿಸಲು ಆಯೋಗದ ಮನವಿ
namma chikmagalurchikamagalurHomeLatest News

ಹಿಂದುಳಿದ ವರ್ಗಗಳ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಸಹಕರಿಸಲು ಆಯೋಗದ ಮನವಿ

Share
Share

ಚಿಕ್ಕಮಗಳೂರು:  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಈಗಾಗಲೇ ವಿದ್ಯುತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಕೋರಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ೯೦ ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿವೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದರಿಂದ ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗಲಿದೆ. ಎರಡನೆಯ ಹಂತದ ಸಮೀಕ್ಷೆ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೭ ರವರೆಗೆ ನಡೆಸಲು ಗುರಿ ಹೊಂದಲಾಗಿದೆ. ಈ ಸಮಯದಲ್ಲಿ ಶಾಲಾ ರಜಾ ದಿನಗಳು ಇರುವುದರಿಂದ ಸಮೀಕ್ಷೆ ಕಾರ್ಯಕ್ಕೆ ಪೂರಕವಾಗುತ್ತದೆ. ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ (ಆರ್.ಆರ್. ನಂಬರ್) ಆಧಾರದ ಮೇಲೆ ವಿನ್ಯಾಸಗೊಳಿಸಿದ ಈ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟ ವ್ಯವಸ್ಥೆಯು ಉತ್ತಮವಾಗಿದೆ. ಅದಕ್ಕನುಗುಣವಾಗಿ ಒಂದು ಅಗತ್ಯವಾದ `ಆಪ್’ ಅಭಿವೃದ್ಧಿಪಡಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಸೇರಿದಂತೆ ಆಯೋಗದ ಇಂಧನ ಇಲಾಖೆಯ ಇ.ಡಿ.ಸಿ.ಎಸ್ ಸಂಸ್ಥೆಯ ಉತ್ಸಾಹಿ ಹಾಗೂ ಸೃಜನಶೀಲ ಸಲಹಾ ತಂಡದ ಸಹಕಾರದೊಂದಿಗೆ ಈ ಪ್ರಕ್ರಿಯೆಯನ್ನು ವಿನ್ಯಾಸಗೊಳಿಸಲಾಗಿದೆ. ಇದು ಸಮೀಕ್ಷೆಯ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಸಹಾಯ ಮಾಡುತ್ತದೆ.

ಇದು ರಾಜ್ಯದಾದ್ಯಂತ ಇರುವ ಇಂಧನ ಇಲಾಖೆಯ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಅಪಾರ ಸಂಖ್ಯೆಯ ‘ಮೀಟರ್ ರೀಡರ್’ಗಳನ್ನು ಒಳಗೊಂಡಿದೆ. ಕರ್ನಾಟಕ ರಾಜ್ಯವು ಎಲ್ಲಾ ಮನೆಗಳನ್ನು ವಿದ್ಯುದ್ದೀಕರಣಗೊಳಿಸುವುದರಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂಬುದು ಹೆಮ್ಮೆಯ ವಿಷಯವಾಗಿದ್ದು, ಎಸ್ಕಾಂಗಳ ಮೀಟರ್ ರೀಡರ್‌ಗಳು, ಗ್ರಾಹಕರ ಮನೆ ಬಳಕೆ ವಿದ್ಯುತ್ ಸಂಪರ್ಕದ ಮೀಟರ್ ಅನ್ನು ಓದುವುದು ಮತ್ತು ಬಿಲ್ಲಿಂಗ್ ಮಾಡುವುದರ ಜೊತೆಗೆ ಮನೆಗಳನ್ನು ‘ಜಿಯೋ ಟ್ಯಾಗ್’ ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವ್ಯಾಪ್ತಿಗೆ ಒಳಪಡಿಸುತ್ತಾರೆ.

ಮೀಟರ್ ರೀಡರ್‌ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ (ಇಡಿಸಿಎಸ್)ಯಡಿ ಸರ್ವರ್‌ಗಳಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲೀಕರಿಸಿದ ನಂತರ ‘ಮನೆ ಪಟ್ಟಿ’ ಸಮೀಕ್ಷೆಯ ಉದ್ದೇಶಕ್ಕಾಗಿ ‘ಮ್ಯಾಪಿಂಗ್’ ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ನಲ್ಲಿ ಮನೆಯ ‘ಸ್ಥಳ’ (ಲೊಕೇಶನ್) ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ `ವಿಶಿಷ್ಟ (ಯೂನಿಕ್ ನಂಬರ್) ಸಂಖ್ಯೆ’ಯನ್ನು ನೀಡಲಾಗುತ್ತದೆ.
ತಮ್ಮ ‘ಬಿಲ್ಲಿಂಗ್ ಸೈಕಲ್’ನಲ್ಲಿ ಮೀಟರ್ ರೀಡರ್‌ಗಳು ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಿದ್ದು, ಅಭಿವೃದ್ಧಿಪಡಿಸಲಾದ ಆಪ್‌ನಲ್ಲಿ ದಾಖಲಿಸುತ್ತಾರೆ. ಇದಾದ ನಂತರ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗುವಂತೆ ಮಾಡುತ್ತಾರೆ.

ಪ್ರಸ್ತಾವಿತ ಸಮೀಕ್ಷೆಯು ಹಿಂದುಳಿದ ವರ್ಗಗಳು ಮತ್ತು ಇತರ ಎಲ್ಲಾ ಜನರ ‘ದತ್ತಾಂಶಗಳನ್ನು ಸೆರೆಹಿಡಿಯುವುದು’ ಮಾತ್ರವಲ್ಲದೆ, ಅಂದಾಜು ೭ ಕೋಟಿ ಜನರಿಗೆ ಸರ್ಕಾರಿ ಇಲಾಖೆಗಳಿಂದ ಪ್ರಾರಂಭಿಸಲಾಗಿರುವ ಹಾಗೂ ಮುಂದೆ ಪ್ರಾರಂಭಿಸಲಿರುವ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಬಹುದಾದ ಉಪಯುಕ್ತ ದತ್ತಾಂಶವಾಗಲಿದೆ. ಮನೆ ಪಟ್ಟಿ ಕಾರ್ಯಾಚರಣೆಗಳ ಈ ಮೊದಲ ಹಂತವು ತುಂಬಾ ಸವಾಲಿನದ್ದಾಗಿದ್ದರೂ ರಾಜ್ಯದ ಎಲ್ಲಾ ಮನೆಗಳನ್ನು ಒಳಗೊಂಡಂತೆ ವ್ಯವಸ್ಥಿತವಾಗಿ ಸಮೀಕ್ಷೆಯನ್ನು ನಡೆಸುವ ಉದ್ದೇಶಕ್ಕಾಗಿ ಇದು ಬಹಳ ಪ್ರಮುಖ ಕಾರ್ಯವಾಗಿದೆ. ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು (ವಿಶೇಷವಾಗಿ ಅಪಾರ್ಟೆಂಟ್ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು) ಮೀಟರ್ ರೀಡರ್‌ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸಲು ಮತ್ತು ಅನುಕೂಲ ಮಾಡಿಕೊಡಲು ಆಯೋಗ ಮನವಿ ಮಾಡಿದೆ.

Commission appeals for cooperation in socio-educational survey of backward classes

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...