ಚಿಕ್ಕಮಗಳೂರು: ನಗರದ ವಿಜಯಪುರ ಬಡಾವಣೆಯಲ್ಲಿ ಮೂಕ ಪ್ರಾಣಿಯ ಮೇಲೆ ವಿಕೃತಿ ಮೆರೆದ ಘಟನೆ ನಡೆದಿದೆ. ಹಸುವಿನ ಬಾಲಕ್ಕೆ ಸೆಂಟ್ ಸ್ಟೇ ಮಾಡಿ ಬೆಂಕಿ ಹಚ್ಚಿದ ೧೬ ವರ್ಷದ ಬಾಲಕನ ಕೃತ್ಯ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ.
ಸಂಜೆಯ ವೇಳೆ ರಸ್ತೆಯಲ್ಲಿ ಹಸು ನಿಂತಿದ್ದಾಗ, ಅಪ್ರಾಪ್ತ ಬಾಲಕ ತನ್ನ ಕೈಯಲ್ಲಿದ್ದ ಸೆಂಟ್ ಸ್ಟೇಯನ್ನು ಹಸುವಿನ ಬಾಲಕ್ಕೆ ಹೊಡೆದು ಬೆಂಕಿ ಹಚ್ಚಿದ್ದಾನೆ. ಈ ದೃಶ್ಯವನ್ನು ಕಂಡ ಸ್ಥಳೀಯರು ತಕ್ಷಣ ಬಾಲಕನನ್ನು ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಾಲಕನ ಹುಚ್ಚಾಟಕ್ಕೆ ಕೋಪಗೊಂಡು ಆತನಿಗೆ ಥಳಿಸಿರುವ ಆರೋಪವು ಕೇಳಿ ಬಂದಿದೆ.
ಘಟನೆಯ ಬಗ್ಗೆ ಮಾಹಿತಿ ದೊರೆತ ಬಸವನಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿದ ಕುರಿತು ಬಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನೊಂದೆಡೆ, ಬಾಲಕನ ತಾಯಿ ತನ್ನ ಮಗನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆಂದು ಪ್ರತಿದೂರು ನೀಡಿದ್ದು ದೂರು, ಪ್ರತಿದೂರು ಠಾಣೆಯಲ್ಲಿ ದಾಖಲಾಗಿದೆ ಎನ್ನಲಾಗಿದೆ.
ಅಪ್ರಾಪ್ತನಾದ ಬಾಲಕನಿಂದ ಪ್ರಾಣಿಹಿಂಸೆ ನಡೆದಿರುವುದು ನಾಗರಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸಮಾಜದಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.ಇಂತಹ ಘಟನೆಗಳನ್ನು ತಡೆಗಟ್ಟಲು ಸಮಾಜ, ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಸ್ಥಳೀಯರು ತಿಳಿಸಿದ್ದಾರೆ.
ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿಯುತ್ತಿದ್ದು, ಕಾನೂನು ಪ್ರಕ್ರಿಯೆ ಅನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Mutant animal attacked in Vijayapura Layout
Leave a comment