ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಲ್ಲಿ ಮುಂದುವರೆಸುವಂತೆ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಗಣಪತಿ ದೇವಸ್ಥಾನದಲ್ಲಿ ತೆಂಗಿನಕಾಯಿ ಒಡೆಯುವ ಮೂಲಕ ಪ್ರಾರ್ಥನೆ ಸಲ್ಲಿಸಿದರು.
ಇಂದು ಬಳಗದ ಪ್ರಧಾನ ಕಾರ್ಯದರ್ಶಿ ಪುನೀತ್ ಕೆಂಪನಹಳ್ಳಿ ಮಾತನಾಡಿ, ಅಹಿಂದ ವರ್ಗದ ಬಲದಿಂದ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರ ನಡೆಸಲು ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯಾಗಿ ಆಯ್ಕೆಮಾಡಿ ಕಳೆದ ಎರಡೂವರೆ ವರ್ಷಗಳ ಕಾಲ ಜನಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿಗಳನ್ನು ಅಧಿಕಾರದಿಂದ ಇಳಿಸುವ ಹುನ್ನಾರ ನಡೆಸುತ್ತಿರುವುದನ್ನು ಖಂಡಿಸಿದರು.
ಜಿಲ್ಲೆಯ ಐದೂ ಶಾಸಕರ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ಚಸ್ಸು, ಅಹಿಂದ ಸಂಘಟನೆಯ ಸತತ ಹೋರಾಟ ಕಾರಣವಾಗಿದ್ದು, ಈ ಸಂಬಂಧ ಶಾಸಕರುಗಳು ಸಿದ್ದು ಪರವಾಗಿ ಹೇಳಿಕೆ ನೀಡದಿರುವ ಬಗ್ಗೆ ವಿಷಾಧ ವ್ಯಕ್ತಪಡಿಸಿದರು.
ಅಹಿಂದ ವರ್ಗ ಜಾಗೃತವಾದರೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕರನ್ನಾಗಿ ಮಾಡಿರುವ ಉದಾಹರಣೆಗಳಿವೆ. ಇದು ಸ್ಪಷ್ಟ ನಿದರ್ಶನವಾಗಿದ್ದು, ಐದು ವರ್ಷಗಳ ಪೂರ್ಣಾವಧಿಯನ್ನು ಸಿದ್ದರಾಮಯ್ಯನವರು ಪೂರ್ಣಗೊಳಿಸಬೇಕೆಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದರು.
ಅಹಿಂದ ಕಾರ್ಯದರ್ಶಿ ಎನ್.ಡಿ. ಚಂದ್ರಪ್ಪ ಮಾತನಾಡಿ, ಮುಂದಿನ ಗ್ರಾ.ಪಂ, ತಾ.ಪಂ, ಜಿ.ಪಂ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿ ಮುಂತಾದ ಸ್ಥಳೀಯ ಸಂಸ್ಥೆಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಿದ್ದರಾಮಯ್ಯನವರ ರಾಜೀನಾಮೆ ಪಡೆದರೆ ಅಹಿಂದ ಮತಗಳು ವಿಭಜನೆಯಾಗುತ್ತವೆ ಎಂದು ಹೇಳಿದರು.
ಈಗಾಗಲೆ ವೀರಪ್ಪ ಮೊಯ್ಲಿ, ಎಸ್. ಬಂಗಾರಪ್ಪ ಈಗ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಸಂಕಷ್ಟದಲ್ಲಿದ್ದು, ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ಜನಪರ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯನವರು ಅಧಿಕಾರದಲ್ಲಿ ಮುಂದುವರೆಸಬೇಕೆಂದು ಒತ್ತಾಯಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಬದುಕಿನ ಬಗ್ಗೆ ಶ್ರಮಿಸುತ್ತಿರುವ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಇಳಿಸುವ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರು ಸೂಕ್ತ ಕಾಲದಲ್ಲಿ ಸರಿಯಾದ ನಿರ್ಧಾರ ಮಾಡುವ ಮೂಲಕ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.
ಕುರುಬ ಸಮುದಾಯ ಸುಳ್ಳು ಹೇಳುವುದಿಲ್ಲ, ನುಡಿದಂತೆ ನಡೆಯುವ ಸಮಾಜದ ಆದರ್ಶವಾಗಿದ್ದು, ಮಾತಿಗೆ ತಪ್ಪದ ಸಿದ್ದರಾಮಯ್ಯನವರು ವಚನ ಭ್ರಷ್ಟರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಮುಖಂಡರಾದ ಶಿವರಾಂ, ನಿಂಗೇಗೌಡ, ಧರ್ಮಪ್ಪ, ಡಿ.ಪಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
Prayers at the temple to continue Siddaramaiah
Leave a comment