ಚಿಕ್ಕಮಗಳೂರು: ಮಾರ್ಗದ ಅತ್ತಿಗುಂಡಿ ಬಿಸಗ್ನಿ ಮಠ ಸಮೀಪ ಮದ ಮಾರಾಟದ ಅಂಗಡಿಯನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಅದನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಗ್ರಾಮಸ್ಥರ ಪರವಾಗಿ ಸುರೇಂದ್ರ ಅವರು ಮಾತನಾಡಿ, ಮಠವಿರುವ ಸ್ಥಳದಲ್ಲಿ ಆಕ್ರಮವಾಗಿ ಮದ ಮಾರಾಟ ಮಾಡುತ್ತಿರುವುದರಿಂದ ಮಠದಲ್ಲಿ ಪೂಜೆ ಮಾಡಲು ಅಡೆತಡೆಯಾಗುತ್ತಿದೆ. ಅದನ್ನು ತೆರವುಗೊಳಿಸುವಂತೆ ಸೂಚಿಸಿದರೂ ಅಧಿಕಾರಿಗಳು ಅದರ ಬಗ್ಗೆ ಗಮನಹರಿಸುತ್ತಿಲ್ಲ ಎಂದು ದೂರಿದರು.
ಅಕ್ರಮವಾಗಿ ಈ ಮದ್ಯದಂಗಡಿಯನ್ನು ತೆರೆದಿದ್ದರೆ ಕೂಡಲೇ ಮುಚ್ಚಿಸುವಂತೆ, ಒಂದು ವೇಳೆ ಪರವಾನಗಿ ಪಡೆದಿದ್ದರೂ ಪರವಾನಗಿಯನ್ನು ರದ್ದುಪಡಿಸುವಂತೆ ನಿರ್ದೇಶನ ನೀಡಿದರು. ಅಲ್ಲದೆ, ತಮ್ಮ ಊರಿಗೆ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡಲು ಸಮಸ್ಯೆಯಾಗುತ್ತಿದೆ ಎಂದು ನಿವೇದಿಸಿಕೊಂಡರು. ಇದಕ್ಕೆ ಸ್ಪಂದಿಸಿದ ಸಚಿವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಗೌಡನಹಳ್ಳಿ ಗ್ರಾಮದ ಲೋಕೇಶ್ ಎಂಬುವರು ಕಳೆದು ಐದು ವರ್ಷಗಳಿಂದಲೂ ತಮ್ಮ ಊರಿಗೆ ನ್ಯಾಯಬೆಲೆ ಅಂಗಡಿ ಇಲ್ಲದೆ ಇರುವುದರಿಂದ ಪಡಿತರ ಪಡೆಯಲು ಪಕ್ಕದ ಊರಿನ ನ್ಯಾಯಬೆಲೆ ಅಂಗಡಿಗೆ ತೆರಳಬೇಕಾಗಿದ್ದು, ಪಡಿತರ ಪಡೆಯಲು ಹೋದ ಸಂದರ್ಭದಲ್ಲಿ ನ್ಯಾಯಬೆಲೆ ಅಂಗಡಿ ತೆರೆದಿರುವುದಿಲ್ಲ ಇಲ್ಲವೆ ಸರ್ವರ್ ಸಮಸ್ಯೆಯಿಂದ ತೊಂದರೆಯಾಗುತ್ತಿದೆ. ನಮ್ಮ ಊರಿಗೆ ನೂತನವಾಗಿ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಅವಕಾಶ ಮಾಡಿಕೊಡಬೇಕೆಂದು ಕೋರಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಇದುವರೆಗೂ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಯಾವುದೇ ಅವಕಾಶವಿರಲಿಲ್ಲ ಹಾಗೂ ಉಪಕೇಂದ್ರ ನೀಡಲು ಕೆಲವೊಂದು ನಿರ್ಬಂಧವಿರುವುದರಿಂದ ತಮ್ಮ ವ್ಯಾಪ್ತಿಯಲ್ಲಿ ಕಾರ್ಡ್ದಾರರ ಸಂಖ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಲಾಗುತ್ತದೆ. ಅನಂತರ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಅದೇ ರೀತಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಚಿವರ ಸಮ್ಮುಖದಲ್ಲಿ ಸಮಸ್ಯೆಗಳ ಬಗ್ಗೆ ಅಲವತ್ತುಕೊಂಡರು. ಒಟ್ಟು ೧೨೩ ದೂರು ಅರ್ಜಿಗಳು ಸ್ವೀಕೃತಗೊಂಡಿದ್ದು, ಇವುಗಳಲ್ಲಿ ೬೦ ಅರ್ಜಿದಾರರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ನಿವೇದಿಸಿಕೊಂಡರು. ಸಚಿವರು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳು ತುರ್ತು ಕ್ರಮ ವಹಿಸಿ ಎಂದು ಸೂಚಿಸಿದರು.
Minister orders vacating liquor shop near Bisagni Mutt
Leave a comment