ಚಿಕ್ಕಮಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಮತ್ತು ರಾಹುಲ್ಗಾಂಧಿ ವಿರುದ್ಧ ಬಿಜೆಪಿ ನಾಯಕರು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಗುರುವಾರ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಘಟಕದಿಂದ ಆಯೋಜಿಸಿದ್ದ ಬಿಜೆಪಿ ಕಚೇರಿ ಮುತ್ತಿಗೆ ಕಾರ್ಯಕ್ರಮ ಕಾಂಗ್ರೆಸ್ ಕಚೇರಿಯಿಂದಲೇ ಆರಂಭವಾಯಿತು. ಹಲವಾರು ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟರು. ಮಾರ್ಗ ಮಧ್ಯದಲ್ಲೇ ಬ್ಯಾರಿಕೇಡ್ ಇಟ್ಟು ಕಾರ್ಯಕರ್ತರನ್ನು ತಡೆದ ಪೊಲೀಸರು ಬಿಜೆಪಿ ಕಚೇರಿಯತ್ತ ತೆರಳದಂತೆ ಕಟ್ಟೆಚ್ಚರ ವಹಿಸಿದರು. ಈ ಮಧ್ಯೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆಯಿತು. ಅಂತಿಮವಾಗಿ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.
ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ಕಚೇರಿಗೆ ಮುತ್ತಿಗೆ ಹಾಕುತ್ತಾರೆ ಎಂಬುದನ್ನು ಅರಿತಿದ್ದ ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟದೊಂದಿಗೆ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಪ್ರತಿರೋಧ ವ್ಯಕ್ತಪಡಿಸಿ ನಂತರ ಹಿಂದಿರುಗಿದರು.
ಬಿಜೆಪಿ ಕಚೇರಿ ಮುತ್ತಿಗೆಗೂ ಮುನ್ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಕಳೆದ ೧೨ ವರ್ಷದಲ್ಲಿ ದಬ್ಬಾಳಿಕೆ ರಾಜಕಾರಣ ನಡೆಸುತ್ತಿದೆ. ಇಡಿ, ಸಿಬಿಐ ನಂತಹ ಸ್ವಾಯುತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷದ ದನಿಯನ್ನು ಕುಗ್ಗಿಸುವ ಕೆಲಸಕ್ಕೆ ಮುಂದಾಗಿರುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.
ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ ವಿರುದ್ಧ ಹಾಕಿದ್ದ ಕೇಸನ್ನು ನ್ಯಾಯಾಲಯ ವಜಾಗೊಳಿಸುವ ಮೂಲಕ ಬಿಜೆಪಿಗೆ ಛೀಮಾರಿ ಹಾಕಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆ ಬಿಜೆಪಿಯಿಂದ ನಡೆಯುತ್ತಿದೆ. ಕಾಂಗ್ರೆಸ್ ವಿರುದ್ಧ ಆಧಾರವಿಲ್ಲದ ಆರೋಪವನ್ನು ೨೦೧೪ ರಿಂದೀಚೆಗೆ ಬಿಜೆಪಿ ಮಾಡುತ್ತಿದೆ. ಸ್ವಾತಂತ್ರ್ಯ ಚಳವಳಿ ಗಟ್ಟಿಗೊಳಿಸಲು ೧೯೧೯ ರಲ್ಲಿ ಯಂಗ್ ಇಂಡಿಯಾ ಸಂಸ್ಥೆಯನ್ನು ಗಾಂಧೀಜಿ ಹುಟ್ಟುಹಾಕಿದರು ಎಂದು ಹೇಳಿದರು.
೧೯೩೮ ರಲ್ಲಿ ಎಜಿಎಲ್ ಸಂಸ್ಥೆಯಿಂದ ನ್ಯಾಶನಲ್ ಹೆರಾಲ್ಡ್ ಪತ್ರಿಕೆ ಉದಯವಾಯಿತು. ಈ ಪತ್ರಿಕೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಬ್ರಿಟೀಷರ ಗುಲಾಮರಾಗಿದ್ದ ಅಂದಿನ ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರು ಆರ್ಗನೈಸರ್ ಪತ್ರಿಕೆಯಲ್ಲಿ ಏನೆಲ್ಲ ಬರೆದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದರು.
ಕಾಂಗ್ರೆಸ್ ಮುಖಂಡರಾದ ಡಾ. ಡಿ.ಎಲ್. ವಿಜಯ್ಕುಮಾರ್, ರೇಖಾಹುಲಿಯಪ್ಪಗೌಡ, ಸಿಡಿಎ ಅಧ್ಯಕ್ಷ ನಯಾಜ್ ಅಹ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಹಿರೇಮಗಳೂರು ರಾಮಚಂದ್ರ, ಮಲ್ಲೇಶ ಎನ್.ಡಿ. ಚಂದ್ರಪ್ಪ, ಎಂ.ಸಿ ಶಿವಾನಂದಸ್ವಾಮಿ, ಹುಣಸೇಮಕ್ಕಿ ಲಕ್ಷ್ಮಣ, ಪ್ರಕಾಶ್ ರೈ, ನಗರಸಭೆ ಸದಸ್ಯರಾದ ಲಕ್ಷ್ಮಣ, ಶಾದಬ್ ಅಲಂಖಾನ್, ಪ್ರಸಾದ್ ಅಮೀನ್, ನಗರಾಧ್ಯಕ್ಷ ತನೂಜ್ ನಾಯ್ಡು, ಕೆ.ಭರತ್ ಮತ್ತಿತರರಿದ್ದರು.
Congress workers arrested for attempting to storm BJP office
Leave a comment