ಚಿಕ್ಕಮಗಳೂರು: ರಾಗಿಯನ್ನು ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರ ನೀಡಿ ಬೆಂಬಲ ಬೆಲೆಗೆ ಖರೀದಿಸಿದಾಗ ರೈತರಿಗೆ ಆರ್ಥಿಕ ಭದ್ರತೆ ಸಿಗುತ್ತದೆ ಎಂಬುದನ್ನು ಸರ್ಕಾರ ಮನಗಂಡಿದ್ದು, ಪ್ರತೀ ಕ್ವಿಂಟಾಲ್ ರಾಗಿಗೆ ೪,೮೮೬ ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.
ಎಪಿಎಂಸಿ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಇಂದು ಏರ್ಪಡಿಸಿದ್ದ ೨೦೨೫-೨೬ನೇ ಸಾಲಿನ ರಾಗಿ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ವರ್ಷ ಪ್ರತಿ ಕ್ವಿಂಟಾಲ್ಗೆ ೪,೨೨೬ ರೂ.ಗೆ ರಾಗಿ ಖರೀದಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಸರ್ಕಾರ ಶಾಸಕರ ಮೂಲಕ ಮನವಿ ಸಲ್ಲಿಸಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚು ಮಾಡಬೇಕೆಂಬ ರೈತರ ಮನವಿ ಮೇರೆಗೆ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಇಂದು ಈ ಬೆಲೆ ನಿಗದಿಯಾಗಿದೆ ಎಂದರು.
ರೈತರ ಹಿತದೃಷ್ಟಿಯಿಂದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂಬ ಕೇಂದ್ರ ಮತ್ತು ರಾಜ್ಯಸರ್ಕಾರದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ಜಿಲ್ಲೆಯ ರಾಗಿ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಕಳೆದ ಬಾರಿ ೧,೯೯೮ ಮಂದಿ ರೈತರು ನೋಂದಣಿ ಮಾಡಿಕೊಂಡಿದ್ದು, ೧೫,೯೫೭ ಕ್ವಿಂಟಾಲ್ ರಾಗಿ ಖರೀದಿಸಲಾಗಿತ್ತು. ಈ ಬಾರಿ ೨೦೨೫-೨೬ನೇ ಸಾಲಿಗೆ ೧,೧೦೬ ರೈತರು ನೋಂದಾಯಿಸಿಕೊಂಡಿದ್ದು, ಸುಮಾರು ೨೬ ಸಾವಿರ ಕ್ವಿಂಟಾಲ್ ರಾಗಿಯನ್ನು ಬೆಂಬಲ ಬೆಲೆಯಡಿ ಖರೀದಿಸಲು ಗುರಿ ಹೊಂದಲಾಗಿದೆ ಎಂದರು.
ರಾಜ್ಯದಲ್ಲಿ ರಾಗಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಇದು ಮುಖ್ಯ ಆಹಾರ ಪದ್ಧತಿಯೂ ಆಗಿದೆ. ಗ್ರಾಹಕರು ಉತ್ತಮ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ರಾಗಿಯನ್ನು ಖರೀದಿಸುತ್ತಿದ್ದಾರೆ. ಇದಕ್ಕೆ ರಾಜ್ಯಸರ್ಕಾರ ಹೆಚ್ಚಿನ ಮಹತ್ವ ನೀಡಿದೆ ಎಂದು ಹೇಳಿದರು.
ಕಡಿಮೆ ನೀರನ್ನು ಬಳಸಿ ರಾಗಿ ಬೆಳೆಯಬಹುದಾಗಿದ್ದು, ಅತ್ಯಾಧುನಿಕ ಉಪಕರಣಗಳು ಮಾರುಕಟ್ಟೆಯಲ್ಲಿ ಲಭ್ಯವಿರುವುದರಿಂದ ಸುಲಭವಾಗಿ ಕೃಷಿ ನಿರ್ವಹಣೆ ಮಾಡಬಹುದಾಗಿದೆ. ತೋಟಗಾರಿಕೆ ಬೆಳೆಗಳಿಗೆ ಹೋಲಿಸಿದರೆ ರಾಗಿ ಉತ್ತಮ ಲಾಭ ನೀಡಲಿದೆ. ದೇಶದ ಶೇ.೭೦ ರಷ್ಟು ಕೃಷಿಯನ್ನು ನಂಬಿರುವ ರೈತರಿಗೆ ಅನುಕೂಲವಾಗಲಿದೆ ಎಂಬುದನ್ನು ಸರ್ಕಾರ ಮನಗಂಡು ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ನಿರ್ಧರಿಸಿದೆ ಎಂದರು.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ಯೋಗಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿ, ೨೦೨೫-೨೬ನೇ ಸಾಲಿನಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯಡಿ ರಾಗಿಯನ್ನು ಖರೀದಿಸಲು ತೀರ್ಮಾನಿಸಲಾಗಿದ್ದು, ರಾಗಿ, ಭತ್ತ, ಸಾಮೆ, ನವಣೆ ಮುಂತಾದವುಗಳನ್ನು ಖರೀದಿಸಲು ಕರ್ನಾಟಕ ರಾಜ್ಯ ಆಹಾರ ನಿಗಮ ರಾಜ್ಯಮಟ್ಟದ ನೋಡಲ್ ಏಜೆನ್ಸಿಯಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ರಾಗಿಗೆ ಮಾತ್ರ ನೋಂದಣಿಯಾಗಿದ್ದು, ಉಳಿದ ಬೆಳೆಗಳು ಅಲ್ಪ ಪ್ರಮಾಣದಲ್ಲಿ ಮಾತ್ರ ಇರುವುದರಿಂದ ಖರೀದಿಸುತ್ತಿಲ್ಲ. ಪ್ರಸಕ್ತ ವರ್ಷ ರಾಗಿಗೆ ಕನಿಷ್ಠ ಬೆಂಬಲ ಬೆಲೆ ಪ್ರತಿ ನಿಗದಿಯಾಗಿರುವ ಬೆನ್ನಲ್ಲೇ ಇಂದಿನಿಂದಲೇ ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ಪ್ರತಿದಿನ ೨೫ ಜನ ರೈತರಿಂದ ೭೫೦ ಕ್ವಿಂಟಾಲ್ ರಾಗಿ ಖರೀದಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ತಿರುಮಲೇಶ್, ಎಪಿಎಂಸಿ ಕಾರ್ಯದರ್ಶಿ ಗೋಪಾಲ್ ವೈದ್ಯ, ಎಡಿ ಅಭಿನಂದನ್, ಅನುರಾಧ ಮತ್ತಿತರರು ಇದ್ದರು.
Purchase of millet at support price of Rs. 4886 per quintal
Leave a comment