ತರೀಕೆರೆ : ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಂಗೇನಹಳ್ಳಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಹಾಲಿನ ಡೈರಿ ಸಹಾಯಕ ಗಗನ್ (26) ಎಂಬಾತನನ್ನು ಬಂಧಿಸಲಾಗಿದ್ದು, ಆತನಿಂದ ಒಟ್ಟು 8,80,300 ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಫೆಬ್ರವರಿ 21ರಂದು ರಂಗೇನಹಳ್ಳಿಯ ಕುಂಬಾರ ಬೀದಿಯ ನಿವಾಸಿಯೊಬ್ಬರು ಕುಟುಂಬ ಸಮೇತ ಬೆಂಗಳೂರಿನಲ್ಲಿ ನಡೆದ ಸಂಬಂಧಿಕರ ಮದುವೆಗೆ ಹೋಗಿದ್ದ ಸಂದರ್ಭದಲ್ಲಿ ಈ ಕಳ್ಳತನ ನಡೆದಿತ್ತು.
ಫೆಬ್ರವರಿ 23ರ ರಾತ್ರಿ ಮನೆಗೆ ಮರಳಿದಾಗ ಬೀರು ಒಡೆದು ಅದರಲ್ಲಿದ್ದ ಸುಮಾರು 46.400 ಗ್ರಾಂ ತೂಕದ ಚಿನ್ನಾಭರಣ ಹಾಗೂ ನಗದು ಹಣ ಕಳುವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಫೆಬ್ರವರಿ 24ರಂದು ಲಕ್ಕವಳ್ಳಿ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ತನಿಖೆ ಚುರುಕುಗೊಳಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತರೀಕೆರೆ ವೃತ್ತ ನಿರೀಕ್ಷಕ ಗಿರೀಶ್ ಬಿ.ವಿ, ಲಕ್ಕವಳ್ಳಿ ಪಿಎಸ್ಐ ವಿಶ್ವನಾಥ್ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ವೈಜ್ಞಾನಿಕ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ ತಂಡವು ಆತನಿಂದ 5,80,000 ರೂಪಾಯಿ ಮೌಲ್ಯದ ಚಿನ್ನದ ಸರ, ಉಂಗುರಗಳು, ಕಿವಿ ರಿಂಗ್ಗಳು ಹಾಗೂ 3,00,300 ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆದಿದೆ. ಕ್ಷಿಪ್ರವಾಗಿ ಕಾರ್ಯನಿರ್ವಹಿಸಿ ಕಳುವಾದ ಮಾಲನ್ನು ಪತ್ತೆ ಹಚ್ಚಿದ ಇಡೀ ತಂಡದ ಕಾರ್ಯಕ್ಷಮತೆಯನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ..
Lakkavalli police succeeded in cracking the case within 24 hours of the theft.
Leave a comment