ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲೂರು ಪೊಲೀಸರು ಕೊನೆಗೂ ಎಫ್ಐಆರ್ (FIR) ದಾಖಲಿಸಿದ್ದಾರೆ.
ಮಾರ್ಚ್ 15ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ರಮೇಶ್ ಅವರು ಬರೆದಿಟ್ಟಿದ್ದ ಡೆತ್ ನೋಟ್ ಆಧಾರದ ಮೇಲೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಚುರುಕುಗೊಂಡಿದೆ.
ಅಣೂರು ಗ್ರಾಮ ಪಂಚಾಯಿತಿಯ ಪಿಡಿಒ (PDO), ಮಾಜಿ ಅಧ್ಯಕ್ಷ ಹಾಗೂ ನಾಲ್ವರು ಸದಸ್ಯರು ಸೇರಿದಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ತಮಗೆ ಕಳೆದ 11 ತಿಂಗಳಿಂದ ಸಂಬಳ ನೀಡಿಲ್ಲ ಮತ್ತು ಪಂಚಾಯಿತಿಯ ಮಾಜಿ ಅಧ್ಯಕ್ಷ ದಿನೇಶ್ ಸೇರಿದಂತೆ ಸತೀಶ್, ಜಗದೀಶ್, ಪ್ರವೀಣ್ ಹಾಗೂ ಭಾಸ್ಕರ್ ಎಂಬುವವರು ಕೆಲಸ ಮಾಡುವಾಗ ತೀವ್ರ ಕಿರುಕುಳ ನೀಡುತ್ತಿದ್ದರು ಎಂದು ರಮೇಶ್ ತಮ್ಮ ಡೆತ್ ನೋಟ್ನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಸಂಬಳ ಬಾರದ ಕಾರಣ ಮೈಕ್ರೋ ಫೈನಾನ್ಸ್ ಸಾಲ ಮರುಪಾವತಿ ಮಾಡಲು ಸಾಧ್ಯವಾಗದಿದ್ದಾಗ, ಆರ್.ಬಿ.ಎಲ್.ಎಸ್.ಕೆ.ಎಸ್ RBLSKS) ಮತ್ತು ಮುತ್ತೂಟ್ ಫೈನಾನ್ಸ್ ಸಿಬ್ಬಂದಿಗಳು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
( ಆರಂಭದಲ್ಲಿ ಪೊಲೀಸರು ಇದನ್ನು ಕೇವಲ ಯುಡಿಆರ್ (UDR ಅಸಹಜ ಸಾವು) ಪ್ರಕರಣ ಎಂದು ದಾಖಲಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಚಂದ್ರಶೇಖರ್ ಅವರು ಮಾಧ್ಯಮ ಪ್ರಕಟಣೆ ನೀಡಿ, 11 ತಿಂಗಳ ಸಂಬಳ ಬಾಕಿ ಇರುವ ಬಗ್ಗೆ ಡೆತ್ ನೋಟ್ನಲ್ಲಿ ಉಲ್ಲೇಖವಾಗಿಲ್ಲ ಮತ್ತು ಸಂಬಳ ನೀಡಲಾಗಿದೆ ಎಂದು ತಿಳಿಸಿದ್ದರು.
ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳು ಸಹ ಹಿರಿಯ ಅಧಿಕಾರಿಗಳಿಗೆ ಡೆತ್ ನೋಟ್ ಬಗ್ಗೆ ಪೂರ್ಣ ಮಾಹಿತಿ ನೀಡದೆ ದಾರಿ ತಪ್ಪಿಸಲು ಯತ್ನಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಸದ್ಯ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
FIR registered in Neeruganti suicide case
Leave a comment