ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಸಾರ್ವಜನಿಕರಲ್ಲಿ ಭೀತಿ ಮತ್ತಷ್ಟು ಹೆಚ್ಚಾಗಿದೆ. ಚಿಕ್ಕಮಗಳೂರು ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಕಾಡಾನೆಯೊಂದು ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದಾಗ, ಯುವಕ ಸಮಯಪ್ರಜ್ಞೆಯಿಂದ ಬೈಕ್ ಬಿಟ್ಟು ಓಡಿ ಹೋಗಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಆದರೆ ಆಕ್ರೋಶಗೊಂಡ ಅನೆ ಬೈಕನ್ನು ತುಳಿದು ಸಂಪೂರ್ಣವಾಗಿ ಪುಡಿಪುಡಿ ಮಾಡಿದೆ. ಈ ಭಾಗದಲ್ಲಿ ಕಳೆದ ಒಂದು ವರ್ಷದಲ್ಲಿ ಕಾಡಾನೆ ದಾಳಿಯಿಂದಾಗಿ ಒಟ್ಟು ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು, ಮಲೆನಾಡಿಗರು ನಿರಂತರವಾಗಿ ಆತಂಕದ ನೆರಳಿನಲ್ಲಿ ಬದುಕುವಂತಾಗಿದೆ.
ಈ ಹಿಂದೆ ಆನೆಗಳ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರು ಪೊಲೀಸರಿಂದ ಏಟು ತಿಂದು, ಮೊಕದ್ದಮೆಗಳನ್ನು ಎದುರಿಸುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನೊಂದು ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡು, ತೊಂದರೆ ನೀಡುತ್ತಿರುವ ಕಾಡಾನೆಯನ್ನು ಕೂಡಲೇ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಗುಡ್ಡೆಕೊಪ್ಪ ಮತ್ತು ಸುತ್ತಮುತ್ತಲಿನ ಹಳ್ಳಿಗರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
Wild elephant attacks biker
Leave a comment