ಚಿಕ್ಕಮಗಳೂರು: ಕಾಫಿನಾಡಿನ ನೂತನ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾಧಿಕಾರಿ ಎಂ.ಎನ್. ನಾಗರಾಜ್ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಅಭಿವೃದ್ಧಿಗಾಗಿ ಸಿಇಒ, ಡಿಎಫ್ಒ ಮತ್ತು ಎಸ್ಪಿ ಅವರನ್ನೊಳಗೊಂಡ ಉತ್ತಮ ತಂಡದೊಂದಿಗೆ, ಎಲ್ಲರೂ ಒಟ್ಟಾಗಿ ಕೆಲಸ ಮಾಡುವುದಾಗಿ ತಿಳಿಸಿದರು. ಭನ್ವರ್ ಸಿಂಗ್ ಮೀನಾ ಅವರು 2017ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಬೆಳಗಾವಿಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಆನಂತರ ಬಸವಕಲ್ಯಾಣದಲ್ಲಿ ಎಸಿಯಾಗಿ, ಕೊಡಗು ಜಿಲ್ಲಾ ಪಂಚಾಯತ್ನಲ್ಲಿ ಸಿಇಒ ಆಗಿ ಸೇವೆ ಸಲ್ಲಿಸಿದ್ದಾರೆ. ಕೆಪಿಎಸ್ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಹಾಗೂ ಬಾಗಲಕೋಟೆಯಲ್ಲೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಇತ್ತೀಚೆಗೆ ಕಲಬುರಗಿ ಜಿಲ್ಲೆಯಲ್ಲಿ ಕೆಲಸ ಮಾಡಿದ ನಂತರ ಇದೀಗ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲೆಯ ಎಡಿಸಿ, ಎಸಿ ಸೇರಿದಂತೆ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ಸಮಸ್ಯೆಗಳು ಮತ್ತು ಆದ್ಯತೆಗಳ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
New District Collector Bhanwar Singh Meena assumes office
Leave a comment