ಚಿಕ್ಕಮಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಟ್ರಸ್ಟ್ಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಕುರಿತು ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮನ ಹೆಸರಿನಲ್ಲಿ ಹಿಂದೂಗಳ ಭಾವನೆಗಳನ್ನು ದುರುಪಯೋಗಪಡಿಸಿಕೊಂಡು ಹಣ ದೋಚಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ಬಿಜೆಪಿ ಇನ್ನು ಮುಂದೆ ಹಿಂದುತ್ವದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದೆ ಎಂದು ಆರೋಪಿಸಿದರು.
ಮರ್ಯಾದ ಪುರುಷೋತ್ತಮ ಶ್ರೀರಾಮನ ಹೆಸರಿನಲ್ಲಿ ಸಂಗ್ರಹಿಸಲಾದ ಕೋಟ್ಯಂತರ ರೂಪಾಯಿಯಲ್ಲಿ ಯಾರಿಗೆ ಎಷ್ಟು ಪಾಲು ಹೋಗಿದೆ ಎಂಬುದನ್ನು ದೇಶದ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದ ಅವರು, ರಾಮ ಮಂದಿರದ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಪ್ರಧಾನಮಂತ್ರಿ Narendra Modi ಅವರು ತರಾತುರಿಯಲ್ಲಿ ಉದ್ಘಾಟನೆ ನಡೆಸಿದ್ದು ಟ್ರಸ್ಟ್ಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಎಂಬ ಅನುಮಾನ ಈಗ ಸಾರ್ವಜನಿಕರಲ್ಲಿ ಮೂಡಿದೆ ಎಂದು ಟೀಕಿಸಿದರು.
ದೇಶದಾದ್ಯಂತ ರಾಮಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲಾದ ಇಟ್ಟಿಗೆ, ಕಬ್ಬಿಣ ಸೇರಿದಂತೆ ಭಕ್ತರು ನೀಡಿದ ಕಾಣಿಕೆಗಳ ಲೆಕ್ಕವನ್ನು ಬಿಜೆಪಿ ಹಾಗೂ ಸಂಬಂಧಪಟ್ಟವರು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ ಅವರು, “ಯುಪಿ ಮಾದರಿ” ಎಂದು ಬಿಜೆಪಿ ಬಿಂಬಿಸುತ್ತಿದ್ದದ್ದು ಇದೇ ರೀತಿಯ ಹಣದ ದಂಧೆಯೇ ಎಂಬ ಪ್ರಶ್ನೆ ಈಗ ಸಾರ್ವಜನಿಕರಲ್ಲಿ ಮೂಡಿದೆ ಎಂದರು.
ಜಿಲ್ಲೆಯಲ್ಲಿ ಗುರು ದತ್ತಾತ್ರೇಯರ ಹೆಸರಿನಲ್ಲಿ ರಾಜಕೀಯ ಮಾಡಿದವರ ಪರಿಸ್ಥಿತಿ ಏನಾಗಿದೆಯೋ, ಅದೇ ರೀತಿಯಲ್ಲಿ ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡಿದವರಿಗೂ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇವಾಲಯದ ಟ್ರಸ್ಟ್ನ ಹಣಕಾಸಿನ ಲೆಕ್ಕ ಕೇಳಿದಾಗ ಸದ್ಯಕ್ಕೆ ಲೆಕ್ಕ ನೀಡಲು ಸಾಧ್ಯವಿಲ್ಲ ಎಂದು ಟ್ರಸ್ಟ್ ಸದಸ್ಯರು ಹೇಳಿರುವ ಸುದ್ದಿ ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ ಅವರು, “ನೀವು ಹೇಗೆ ರಾಮ ಮಂದಿರದ ಲೆಕ್ಕ ಕೇಳಿದ್ದೀರೋ, ಅದೇ ರೀತಿಯಲ್ಲಿ ರಾಜ್ಯ ಸರ್ಕಾರವೂ ವಿವಿಧ ಸಂಸ್ಥೆಗಳ ಲೆಕ್ಕ ಕೇಳಿದರೆ ಅದಕ್ಕೆ ವಿರೋಧ ವ್ಯಕ್ತಪಡಿಸುವುದು ಏಕೆ?” ಎಂದು ಪ್ರಶ್ನಿಸಿದರು.
ಬಂಧಿತ ಟ್ರಸ್ಟ್ ಸದಸ್ಯರು ಬಿಜೆಪಿ ಹಾಗೂ ಸಂಘಪರಿವಾರದ ನಿಷ್ಠಾವಂತ ಕಾರ್ಯಕರ್ತರು ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿವೆ ಎಂದು ಉಲ್ಲೇಖಿಸಿದ ಅವರು, ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸುಪ್ರೀಂ ಕೋರ್ಟ್ನ ನಿವೃತ್ತ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಿವಕುಮಾರ್, ಶರತ್, ಪ್ರಕಾಶ್, ರಾಜೇಶ್, ಲಾಕೇಶ್ ಇದ್ದರು.
Money was looted in the name of Lord Rama.
Leave a comment