ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಮಟ್ಟದ ಹಾಗೂ ಅರೆಬೆಂದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ನರಿಗುಡ್ಡನಹಳ್ಳಿ ಸರ್ಕಲ್ ಸಮೀಪದಲ್ಲಿರುವ ಈ ವಸತಿ ಶಾಲೆಯಲ್ಲಿ ಸುಮಾರು 190 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಗ್ಗಟ್ಟಾಗಿ ತರಗತಿಯಿಂದ ಹೊರಬಂದು ತಮ್ಮ ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ.
ವಸತಿ ಶಾಲೆಯ ವಾರ್ಡನ್ ಸವಿತಾ ಅವರ ಬೇಜವಾಬ್ದಾರಿ ನಡವಳಿಕೆಗೆ ವಿದ್ಯಾರ್ಥಿಗಳು ಸಂಪೂರ್ಣ ಬೇಸತ್ತಿದ್ದಾರೆ. ವಿದ್ಯಾರ್ಥಿಗಳು ಅರೆಬೆಂದ ಚಿಕನ್ ಸೇರಿದಂತೆ ಕಳಪೆ ಗುಣಮಟ್ಟದ ಆಹಾರ ಸೇವಿಸಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರೂ ವಾರ್ಡನ್ ಕ್ಯಾರೆ ಎಂದಿಲ್ಲ. ಇದರ ಜೊತೆಗೆ ಸರ್ಕಾರದಿಂದ ವಸತಿ ಶಾಲೆಯ ಮಕ್ಕಳಿಗೆ ತಲುಪಬೇಕಾದ ಸಾಮಗ್ರಿಗಳು ಮತ್ತು ಅಗತ್ಯ ಪರಿಕರಗಳು ದುರ್ಬಳಕೆಯಾಗುತ್ತಿವೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಗಂಭೀರವಾಗಿ ಆರೋಪಿಸಿದ್ದಾರೆ.
ಅಷ್ಟೇ ಅಲ್ಲದೆ, ಶೈಕ್ಷಣಿಕ ಪ್ರವಾಸಕ್ಕಾಗಿ ಸರ್ಕಾರದಿಂದ ಪೂರ್ಣ ಪ್ರಮಾಣದ ಹಣ ಬಿಡುಗಡೆಯಾಗಿದ್ದರೂ ಸಹ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.
ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡು ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
Leave a comment