ಚಿಕ್ಕಮಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ ಭೀಮ್ ಆರ್ಮಿ ಮತ್ತು ಭಾರತೀಯ ಭಾರತೀಯ ಬೌದ್ಧ ಮಹಾಸಭಾದಿಂದ ಶುಕ್ರವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಲಾಯಿತು.
ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ತನಕ ಮೆರವಣಿಗೆ ನಡೆಸಿದ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ಕುಮಾರ್ ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿನ ವೈಫಲ್ಯಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದೇಶದಲ್ಲೇ ಇಂತಹ ದೊಡ್ಡ ಮಟ್ಟದ ಪರೀಕ್ಷಾ ಅಕ್ರಮ ನಡೆದಿರುವ ಉದಾಹರಣೆಗಳಿಲ್ಲ. ಬಿಜೆಪಿ ನಾಯಕರು ಅದನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಏಕೆ ಪಡೆಯುತ್ತಿಲ್ಲ ಎಂದು ಪ್ರಶ್ನಿಸಿದರು.
ಭೀಮ್ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೇಶ್ ಮಾತನಾಡಿ, ‘ದೇಶದ ದೊಡ್ಡ ಹಗರಣ ಇದಾಗಿದೆ. ನೀಟ್ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ನಾಚಿಕೆಗೇಡು. ಪ್ರಧಾನಿ ನರೇಂದ್ರ ಮೋದಿ ಅವರು ಈ ಹಗರಣದ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳಿದರು.
ದಲಿತ ಸಂಘಟನೆ ಮುಖಂಡ ಹುಣಸೇಮಕ್ಕಿ ಲಕ್ಷ್ಮಣ್ ಮಾತನಾಡಿ, ದೇಶದ ದೊಡ್ಡ ಕೋಚಿಂಗ್ ಸೆಂಟರ್ಗಳ ಒಳ ಒಪ್ಪಂದದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದರಲ್ಲಿ ಬಿಜೆಪಿ ಅಂಗ ಸಂಸ್ಥೆಗಳ ಪಾಲಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯದಿದ್ದರೆ ದಲಿತ ಸಂಘಟನೆಗಳು ದೆಹಲಿ ಚಲೋ ಹೋಗಿ ಮುತ್ತಿಗೆ ಹಾಕಲಾಗವುದು ಎಂದು ಹೇಳಿದರು.
ಅಲೆಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ದಿವಾಕರ್, ಎಸ್ಡಿಪಿಐ ಮುಖಂಡ ಗೌಸ್ ಮುನಿರ್, ರಾಜ್ ಪ್ರಶಾಂತ್, ಪ್ರವೀಣ್ ಗುಂಡ, ದಿಲೀಪ್ ಭಾಗವಹಿಸಿದ್ದರು.
Torch march condemns attack on students
Leave a comment