ಚಿಕ್ಕಮಗಳೂರು: ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆಗಾಗಿ ಶುಕ್ರವಾರ ನಡೆದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಚೇತನ, ಧನುಶ್ರಿ, ಉದ್ಯೋಗಿನಿ ಮತ್ತು ಪುನರ್ವಸತಿ ಸೇರಿದಂತೆ ಹಲವು ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವಂತಾಗಬೇಕು. ಇತರರಂತೆ ಬದುಕು ನಡೆಸುವಂತಾಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಲಿಂಗತ್ವ ಅಲ್ಪಸಂಖ್ಯಾತರ ಅನುಕೂಲಕ್ಕಾಗಿ ಜಿಲ್ಲಾ ಪಂಚಾಯಿತಿ, ನಗರಸಭೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂತಾದ ಸ್ಥಳಗಳಲ್ಲಿ ಯೂನಿಸೆಕ್ಸ್ ಶೌಚಾಲಯ ನಿರ್ಮಾಣ ಮಾಡುವಂತೆ ಅಥವಾ ಲಭ್ಯವಿರುವ ಶೌಚಾಲಯಗಳಲ್ಲಿ ಒಂದನ್ನು ಯೂನಿಸೆಕ್ಸ್ ಶೌಚಾಲಯವಾಗಿ ಪರಿವರ್ತಿಸಿ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಮಾತನಾಡಿ, ಜಿಲ್ಲೆಯಲ್ಲಿ ೧೪೦ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಅವರಿಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಆವರಣದ ಸುತ್ತಮುತ್ತ ಮತ್ತು ಹೊಸ ನ್ಯಾಯಾಲಯ ಸಂಕೀರ್ಣದ ಸುತ್ತಮುತ್ತ ಟೀ ಕ್ಯಾಂಟೀನ್, ಜೆರಾಕ್ಸ್ ಇತ್ಯಾದಿ ಆದಾಯೋತ್ಪನ್ನಕರ ಚಟುವಟಿಕೆಗಳಿಗಾಗಿ ಸ್ಥಳಾವಕಾಶ ಒದಗಿಸುವಂತೆ, ವಿವಿಧ ಇಲಾಖೆಗಳಲ್ಲಿ ನೇಮಕ ಮಾಡಿಕೊಳ್ಳುವ ಗುತ್ತಿಗೆ, ಹೊರಗುತ್ತಿಗೆ ಆಧಾರದ ಹುದ್ದೆಗಳನ್ನು ಭರ್ತಿ ಮಾಡುವಾಗ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.೧ ಮೀಸಲಾತಿ ನೀಡುವಂತೆ ಮನವಿ ಮಾಡಿದ್ದಾರೆ, ಅಲ್ಲದೆ ಪಡಿತರ ಚೀಟಿಗಾಗಿ ಮನವಿ ಮಾಡಿದ್ದು, ಅವರ ಅರ್ಜಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಕುರಿತು ಪರಿಶೀಲಿಸಿ ಕ್ರಮ ವಹಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಕೆ.ಮಂಜುನಾಥ್, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಯೋಗಾನಂದ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿ.ಪಂ. ಕಾರ್ಯದರ್ಶಿ (ಆಡಳಿತ) ಪೂರ್ಣಿಮಾ, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಕೆ.ಎಸ್.ರವಿಪ್ರಸಾದ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
Create awareness about government schemes for gender minorities
Leave a comment