ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ‘ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಕಾವೇರಿ ನೀರು ನಿಯಂತ್ರಣ ಸಮಿತಿ ತೀರ್ಮಾನದ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಹೇಶ್ ಒತ್ತಾಯಿಸಿದರು.
ಕರ್ನಾಟಕ ಸರ್ಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯೂ ಕರ್ನಾಟಕದ ರೈತರಿ ಗೆ ಮರಣ ಶಾಸನವನ್ನು ಪದೆ ಪದೇ ಬರೆಯುವ ಕೆಲಸ ಮಾಡುತ್ತಿದೆ. ಹಿಂದಿನ ಸರ್ಕಾರಗಳು ಮಾಡಿದ್ದನ್ನೇ ಈಗಿನ ಸರ್ಕಾರ ಕೂಡ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತೀವ್ರ ಬರಗಾಲ ಇರುವುದರಿಂದ ಯಾವುದೇ ನದಿಗಳಲ್ಲಿ ನೀರಿಲ್ಲ. ಜಲಾಶಯದಲ್ಲಿ ನೀರು ಬತ್ತಿ ಹೋಗಿದೆ. ಅದನ್ನು ಮನಗಾಣದೆ ತಮಿಳುನಾಡಿನ ರಾಜಕೀಯ ಒತ್ತಡಕ್ಕೆ ಹಾಗೂ ಕಾಂಗ್ರೆಸ್ ಸರ್ಕಾರದ ಹೈಕಮಾಂಡ್ ಒತ್ತಡಕ್ಕೆ ಮಣಿದು ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ತಮಿಳುನಾಡಿಗೆ ಕರ್ನಾಟಕದಿಂದ ನಿತ್ಯ 3500 ಕ್ಯುಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) ಶಿಫಾರಸು ಮಾಡಿದೆ. ಅದಕ್ಕೂ ಮುನ್ನವೇ ಮುಖ್ಯಮಂತ್ರಿ ಅವರು ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಕರ್ನಾಟಕದಲ್ಲಿ ಬದಲಾವಣೆ ತರುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆರಂಭದಿಂದಲ್ಲೇ ರೈತರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಈಗಾಗಲೇ ರಾಜ್ಯದ ಎಲ್ಲೆಡೆ ಬರಗಾಲದ ಛಾಯೆ ಎದ್ದು ಕಾಣುತ್ತಿದೆ. ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ವಾಡಿಕೆ ಮಳೆ ಬರದ ಕಾರಣ ಜಲಾಶಯಗಳಲ್ಲಿ ನೀರಿಲ್ಲ. ಇಂತಹ ಸಂದರ್ಭದಲ್ಲಿ ಬೇರೆ ರಾಜ್ಯಗಳಿಗೆ ನೀರು ಹರಿಸಬೇಕೆಂಬ ತೀರ್ಮಾನ ಅವೈಜ್ಞಾನಿಕ ಎಂದರು.
ಜಲಾಶಯಗಳನ್ನು ನಂಬಿ ಬೆಳೆ ಬೆಳೆಯಬೇಡಿ ಎಂದು ರೈತರಿಗೆ ಸಲಹೆ ಕೊಟ್ಟಿರುವ ಸರ್ಕಾರ, ಪ್ರತಿ ದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಬೆಂಗಳೂರು, ಮಂಡ್ಯ, ಮದ್ದೂರು ಸೇರಿ ಹಲವು ನಗರಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಲಿದೆ. ಈ ಕಾರಣದಿಂದ ಮೇಲ್ಮನವಿ ಸಲ್ಲಿಸಿ ಕರ್ನಾಟಕದ ರೈತರಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಗುರುಶಾಂತಪ್ಪ, ಬಸವರಾಜ್, ಚಂದ್ರಶೇಖರ್, ಶಿವಕುಮಾರ್, ಕುಮಾರಸ್ವಾಮಿ, ಭದ್ರೇಗೌಡ ಇದ್ದರು.
State Farmers’ Association protests against release of Cauvery water
Leave a comment