ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ ನಿವಾಸಿ ಸೈಯದ್ ಅರ್ಬಾಜ್ ಅವರು ಆಗಸ್ಟ್ 2ರಂದು ರಾತ್ರಿ ಸುಮಾರು 9 ಗಂಟೆಗೆ ಕುರುಬರಹಳ್ಳಿಯಲ್ಲಿರುವ ಸ್ನೇಹಿತನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಎಸ್. ಬಿದರೆ–ಕೆ.ಬಿ. ಹಾಳ್ ಮುಖ್ಯರಸ್ತೆಯ ಕುರುಬರಹಳ್ಳಿ ಗೇಟ್ ಸಮೀಪ ಹಿಂಬದಿಯಿಂದ ಬಂದ ಕೆಎ–13–ಇಎಕ್ಸ್–4042 ಸಂಖ್ಯೆಯ ಯಮಹಾ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಸೈಯದ್ ಅರ್ಬಾಜ್ ಅವರು ರಸ್ತೆಗೆ ಬಿದ್ದು ತಲೆ, ಮುಖ ಹಾಗೂ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ಬಳಿಕ ಬೈಕ್ ಚಾಲಕ ಹಾಗೂ ಸ್ಥಳೀಯರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಮೃತರ ತಂದೆ ಸೈಯದ್ ನುರುಲ್ಲಾ ನೀಡಿದ ದೂರಿನ ಮೇರೆಗೆ, ಬಾಣಾವರ ನಿವಾಸಿ ಇನಾಯತ್ ಎಂಬಾತ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Young pedestrian dies after being hit by two-wheeler
Leave a comment