ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಯೋಜನೆಯಡಿ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಮೂಲಕ ತಮ್ಮ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ ಸಹಕರಿಸುವುದರ ಜೊತೆಗೆ, ವೈಯಕ್ತಿಕ ಆದಾಯವನ್ನು ಹೆಚ್ಚಿಸಿಕೊಂಡು ಆರ್ಥಿಕವಾಗಿ ಸದೃಢರಾಗಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಎಸ್.ಕೀರ್ತನಾ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಜುಲೈ ೧ ರಿಂದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಯೋಜನೆ ಅನುಷ್ಠಾನಗೊಂಡಿದ್ದು, ಅರ್ಹ ಗ್ರಾಮೀಣ ಕುಟುಂಬಕ್ಕೆ ೧೦೦ ದಿನಗಳ ಬದಲಾಗಿ ೧೨೫ ಮಾನವ ದಿನಗಳ ಕಡ್ಡಾಯ ಉದ್ಯೋಗ ಅವಕಾಶ ಕಲ್ಪಿಸುವ ಜೊತೆಗೆ ಗ್ರಾಮೀಣ ಪ್ರದೇಶದ ಸಮಗ್ರ ಮತ್ತು ಸ್ಯಾಚುರೇಷನ್ ಆಧಾರಿತ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾಉ), ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಎಲ್ಲ ಹಂತದ ಅಧಿಕಾರಿ ಸಿಬ್ಬಂದಿಗೆ ಈಗಾಗಲೇ ಮಾಸ್ಟರ್ ಟ್ರೇನರ್ಗಳಿಂದ ತರಬೇತಿಯನ್ನು ನೀಡಲಾಗಿದೆ.
ದಿನಗೂಲಿ ರೂ.೩೭೦ರಿಂದ ರೂ.೩೮೨ಕ್ಕೆ ಏರಿಕೆ
ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ವಿಬಿಜಿ ರಾಮ್ ಜಿ) ಯೋಜನೆಯಡಿ ಗ್ರಾಮೀಣ ಕೂಲಿಕಾರರಿಗೆ ನೀಡಲಾಗುವ ದಿನಗೂಲಿಯನ್ನು ರೂ.೩೭೦ರಿಂದ ರೂ.೩೮೨ಕ್ಕೆ ಹೆಚ್ಚಿಸಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡುವ ವ್ಯವಸ್ಥೆ ಮುಂದುವರಿಯಲಿದೆ. ಕೂಲಿಕಾರರು ನಿರ್ವಹಿಸಿದ ಕೆಲಸಕ್ಕೆ ಸಂಬಂಧಿಸಿದ ಕೂಲಿ ಮೊತ್ತವನ್ನು ಗರಿಷ್ಠ ೧೫ ದಿನಗಳೊಳಗಾಗಿ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡುವುದು ಕಡ್ಡಾಯವಾಗಿದ್ದು, ಕೂಲಿ ಪಾವತಿಯಲ್ಲಿ ವಿಳಂಬವಾದಲ್ಲಿ ನಿಯಮಾನುಸಾರ ಪರಿಹಾರ ಮೊತ್ತವನ್ನು ದಂಡದ ರೂಪದಲ್ಲಿ ಪಾವತಿಸಬೇಕಾಗುತ್ತದೆ.
ದಿನಗೂಲಿ ಹೆಚ್ಚಳದಿಂದ ಗ್ರಾಮೀಣ ಪ್ರದೇಶದ ಕೂಲಿಕಾರರ ಆದಾಯದಲ್ಲಿ ಹೆಚ್ಚಳವಾಗಲಿದ್ದು, ಅವರ ಜೀವನಮಟ್ಟ ಸುಧಾರಿಸಲು ಹಾಗೂ ಗ್ರಾಮೀಣ ಕುಟುಂಬಗಳ ಆರ್ಥಿಕ ಸದೃಢತೆಗೆ ಇದು ಸಹಕಾರಿಯಾಗಲಿದೆ. ಕೂಲಿಕಾರರ ಹಿತದೃಷ್ಟಿಯಿಂದ ಕೈಗೊಂಡಿರುವ ಈ ಕ್ರಮವು ಗ್ರಾಮೀಣ ಜನತೆಗೆ ಸಂತಸದ ವಿಚಾರವಾಗಿದೆ.
ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ (ವಿಬಿಜಿ ರಾಮ್ ಜಿ) ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಮುಖ್ಯವಾಗಿ ೪ ವಿಷಯಾಧಾರಿತ ಕಾರ್ಯ ವರ್ಗಗಳ ಅಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ.
೧. ಜಲ ಭದ್ರತಾ ಕಾರ್ಯಗಳು ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಸಂಗ್ರಹ ಹಾಗೂ ಜಲ ಸಂಪನ್ಮೂಲಗಳ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.
೨. ಮೂಲ ಗ್ರಾಮೀಣ ಮೂಲ ಸೌಕರ್ಯ ಗ್ರಾಮೀಣ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ.
೩. ಜೀವನೋಪಾಯ ಸಂಬಂಧಿತ ಮೂಲಸೌಕರ್ಯ ಗ್ರಾಮೀಣ ಜನರ ಉದ್ಯೋಗ ಮತ್ತು ಆದಾಯದ ಅವಕಾಶಗಳನ್ನು ಹೆಚ್ಚಿಸುವ ಹಾಗೂ ವಿವಿಧ ಜೀವನೋಪಾಯ ಚಟುವಟಿಕೆಗಳಿಗೆ ನೆರವಾಗುವ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
೪. ತೀವ್ರ ಹವಾಮಾನ ಮತ್ತು ವಿಪತ್ತು ಶಮನ ಕಾರ್ಯಗಳು ಪ್ರವಾಹ, ಬರ, ಅತಿವೃಷ್ಟಿ ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳು ಹಾಗೂ ವಿಪತ್ತುಗಳಿಂದ ಉಂಟಾಗುವ ಪರಿಣಾಮಗಳನ್ನು ಕಡಿಮೆ ಮಾಡಲು ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.
ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ವಿಬಿಜಿ ರಾಮ್ ಜಿ) ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಅಗತ್ಯತೆ ಹಾಗೂ ಸ್ಥಳೀಯ ಆದ್ಯತೆಗಳಿಗೆ ಅನುಗುಣವಾಗಿ ಒಟ್ಟು ೩೧೮ ವಿಧದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ, ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡಲಾಗುತ್ತದೆ.
VB Ji Ram Ji’s support to stop migration in rural areas
Leave a comment