ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ತ್ರಿವರ್ಣ ಧ್ವಜದೊಂದಿಗೆ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರು, ಆ.24ರ ರಾತ್ರಿ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಟಿಪ್ಪು ಸುಲ್ತಾನ್ ಅವರ ಕಟೌಟ್ ಅಳವಡಿಸಲಾಗಿತ್ತು. ಅದಕ್ಕೆ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದರು.
ಈ ಕೃತ್ಯವು ರಾಷ್ಟ್ರ ವಿರೋಧಿ ಮನೋಭಾವವನ್ನು ಬಿಂಬಿಸುತ್ತದೆ ಎಂದು ಆರೋಪಿಸಿದ ಅವರು, ಹಾಡನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಯುಎಪಿಎ ಕಾಯ್ದೆ ಹಾಗೂ ಬಿಎನ್ಎಸ್ ಸೆಕ್ಷನ್ 152ರಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಚಿಕ್ಕಮಗಳೂರು ತಾಲ್ಲೂಕು ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಸಭೆಯಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಪ್ರತಿಭಟನಾ ಸಭೆಯ ಬಳಿಕ ತಾಲ್ಲೂಕು ಕಚೇರಿಯಿಂದ ಎಂ.ಜಿ. ರಸ್ತೆ ಮಾರ್ಗವಾಗಿ ಅಜಾದ್ ಪಾರ್ಕ್ವರೆಗೆ ತ್ರಿವರ್ಣ ಧ್ವಜದೊಂದಿಗೆ ಮೆರವಣಿಗೆ ನಡೆಸಲಾಗುವುದು. ಜಾತಿ, ಭಾಷೆ, ಪಕ್ಷ ಹಾಗೂ ಧರ್ಮದ ಭೇದವಿಲ್ಲದೆ ಎಲ್ಲ ಭಾರತೀಯರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಸಮಿತಿ ಮನವಿ ಮಾಡಿದೆ.
ಕಾರ್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧರು ಆಗಮಿಸಿ ವರದಿ ಮಾಡಬೇಕೆಂದು ಮನವಿ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ರಾಷ್ಟ್ರ ಸುರಕ್ಷಾ ಸಮಿತಿಯ ಸಂತೋಷ್ ಕೋಟ್ಯಾನ್, ಭಗವಾನ್, ಮಂಜುನಾಥ್, ಸಚಿನ್ ಹಾಗೂ ಶ್ರೀರಾಮ ಸೇನೆಯ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು.
Massive protest demanding action against pro-Pakistan song for Tipu cutout
Leave a comment