ಚಿಕ್ಕಮಗಳೂರು: ಪೌರಕಾರ್ಮಿಕರಿಗೆ ವಸತಿ ಸೌಲಭ್ಯ, ರಜೆ, ಮಕ್ಕಳ ಶಿಕ್ಷಣ ಸೇರಿದಂತೆ ಅವರ ಕಲ್ಯಾಣಕ್ಕೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಹರ್ದೀಪ್ ಸಿಂಗ್ ಗಿಲ್ ತಿಳಿಸಿದರು.
ನಗರದ ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪೌರ ಕಾರ್ಮಿಕರು ಇಂದಿಗೂ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಇಡೀ ದೇಶ ಸ್ವಚ್ಛವಾಗಿರಬೇಕು ಎಂದರೆ ಅದಕ್ಕೆ ಪೌರಕಾರ್ಮಿಕರು ಬೇಕು. ಹೀಗಿರುವಾಗ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಎಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಆಡಳಿತ ಗಮನಹರಿಸಬೇಕು ಎಂದರು.
ಒಂದು ತಿಂಗಳ ಒಳಗಾಗಿ ಪೌರ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು. ಅವರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಪೌರಕಾರ್ಮಿಕರೊಂದಿಗೆ ಅಧಿಕಾರಿಗಳು ಸಭೆ ನಡೆಸಬೇಕು. ಸ್ಥಳೀಯ ಮಟ್ಟದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು. ಮೇಲ್ಮಟ್ಟದ ಅನುಮತಿ ಪಡೆದು ಬಗೆಹರಿಸಬಹುದಾದ ಸಮಸ್ಯೆಗಳನ್ನು ಒಂದು ತಿಂಗಳ ಒಳಗಾಗಿ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ಅಧಿಕಾರಿ ಈ ವಿಚಾರದಲ್ಲಿ ನಿರ್ಲಕ್ಷ??ಅಥವಾ ಕರ್ತವ್ಯಲೋಪ ತೋರಿದರೆ ಆಯೋಗದ ವತಿಯಿಂದ ಅವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ಪೌರಕಾರ್ಮಿಕರಿಗೆ ನೀಡಲಾಗಿದ್ದ ಆಹಾರಕ್ಕೆ ಸಂಬಂಧಿಸಿದ ಸಮಸ್ಯೆಯೂ ಸಭೆಯಲ್ಲಿ ಪ್ರಸ್ತಾಪಗೊಂಡಿದೆ. ಈ ರೀತಿಯ ಸಮಸ್ಯೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಮತ್ತೆ ಇಂತಹ ಸಮಸ್ಯೆ ಎದುರಾದರೆ ಆಯೋಗವು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಪೌರಕಾರ್ಮಿಕರಿಗೆ ನೀಡಲಾಗುತ್ತಿರುವ ರೈನ್ಕೋಟ್ಗಳ ಗುಣಮಟ್ಟದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಹಲವು ವ?ಗಳಿಂದ, ಸುಮಾರು ೭೦, ೮೦ ವ?ಗಳಿಂದ ವಾಸಿಸುತ್ತಿರುವ ಪೌರಕಾರ್ಮಿಕರಿಗೆ ಇನ್ನೂ ನಿವೇಶನ ಹಂಚಿಕೆ ಪತ್ರ ದೊರೆತಿಲ್ಲ ಎಂಬ ಸಮಸ್ಯೆಯನ್ನೂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಈ ಎಲ್ಲ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪೌರಕಾರ್ಮಿಕರ ಸಾವಿನ ನಂತರ ಕುಟುಂಬಗಳಿಗೆ ಸಂಬಂಧಿಸಿದ ಸಮಸ್ಯೆಗಳು, ರಜೆಗಳ ಹಣ ಪಾವತಿ ಆಗದಿರುವುದು, ಕಡಿಮೆ ವೇತನ, ವೇತನ ಸಮಯಕ್ಕೆ ಸರಿಯಾಗಿ ದೊರೆಯದಿರುವುದು ಸೇರಿದಂತೆ ಹಲವು ಸಮಸ್ಯೆಗಳು ಸಭೆಯಲ್ಲಿ ಪ್ರಸ್ತಾಪಗೊಂಡಿವೆ. ಮುಂದೆ ಈ ರೀತಿಯ ತಪ್ಪುಗಳು ಮರುಕಳಿಸಬಾರದು ಎಂದರು.
ಉಪಾಹಾರ, ರೈನ್ಕೋಟ್ಗಳ ಗುಣಮಟ್ಟ, ವಸತಿ, ವೇತನ, ರಜೆಗಳ ಹಣ ಹಾಗೂ ಇತರ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಪರಿಹರಿಸಿ, ಅದರ ವರದಿಯನ್ನು ಆಯೋಗಕ್ಕೆ ಸಲ್ಲಿಸುವುದಾಗಿ ಅಧಿಕಾರಿಗಳು ಆಯೋಗದ ಸದಸ್ಯರಿಗೆ ಭರವಸೆ ನೀಡಿದರು.
ಪೌರಕಾರ್ಮಿಕರ ಆರೋಗ್ಯ ತಪಾಸಣೆ ಕುರಿತ ವಿಚಾರವೂ ಸಭೆಯಲ್ಲಿ ಪ್ರಸ್ತಾಪಗೊಂಡಾಗ, ಕಾಲಕಾಲಕ್ಕೆ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸುವುದು ಸ್ಥಳೀಯ ಸಂಸ್ಥೆಗಳ ಕರ್ತವ್ಯವಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಅಧ್ಯಕ್ಷ ಕುರುಬಂಗಿ ವೆಂಕಟೇಶ್ ಮಾತನಾಡಿ, ಪೌರಕಾರ್ಮಿಕರಿಗೆ ಗುಣಮಟ್ಟದ ಉಪಹಾರ ನೀಡಬೇಕು. ನಗರ ಸಭೆ ವ್ಯಾಪ್ತಿ ಮಾತ್ರವಲ್ಲದೆ ಎಲ್ಲಾ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿರುವ ಪೌರಕಾರ್ಮಿಕರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಬೇಕು. ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಗಮನಹರಿಸದ ಅಧಿಕಾರಿಗಳನ್ನು ಕೂಡಲೇ ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿದರು.
ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಲತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Provide facilities to civic workers.
Leave a comment