ಚಿಕ್ಕಮಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ.
ತೇಗೂರು ಗ್ರಾಮದ ಜನರಿಂದ ಅಕ್ಕಿಯನ್ನು ಸಂಗ್ರಹಿಸಿದ್ದ ಆಟೋ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿ, ಅದನ್ನು ನಗರದ ಅಂಗಡಿಯೊಂದಕ್ಕೆ ಮಾರಾಟ ಮಾಡಲು ಸಾಗಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ನಗರದ ಎನ್ಎಂಸಿ ವೃತ್ತದ ಬಳಿ ದಾಳಿ ನಡೆಸಿ ಆಟೋವನ್ನು ತಡೆದು ತಪಾಸಣೆ ನಡೆಸಿದ್ದಾರೆ.
ಪರಿಶೀಲನೆಯ ವೇಳೆ ಆಟೋದಲ್ಲಿ ಸಾಗಿಸುತ್ತಿದ್ದ ಸುಮಾರು 400 ಕೆಜಿ ತೂಕದ ಅನ್ನಭಾಗ್ಯದ ಅಕ್ಕಿ ಪತ್ತೆಯಾಗಿದ್ದು, ಅದಕ್ಕೆ ಯಾವುದೇ ಸೂಕ್ತ ದಾಖಲೆ ಅಥವಾ ಬಿಲ್ ಇಲ್ಲದ ಕಾರಣ ಅಧಿಕಾರಿಗಳು ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಅಕ್ರಮ ಸಾಗಾಟಕ್ಕೆ ಬಳಸಿದ್ದ ಆಟೋ ಹಾಗೂ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Annabhagya Yojana rice illegal sale ring detected
Leave a comment