ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗೆ ನಿಗದಿಪಡಿಸಿರುವ ಅನುದಾನವನ್ನು ಬೇರೆ ಯಾವ ಯೋಜನೆಗಳಿಗೂ ಬಳಸಬಾರದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರಡ್ಡಿ ಅವರನ್ನು ಗುರುವಾರ ಭೇಟಿ ಮಾಡಿದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರ ಅಭಿವೃದ್ಧಿಗಾಗಿ ಕಲಂ ೭ ಸಿ ಮತ್ತು ೭ ಡಿ ರಲ್ಲಿ ನಿಗದಿಪಡಿಸಿದ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶವಿರುವುದನ್ನು ರದ್ದುಪಡಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಲವು ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ, ಹಲವಾರು ಕಾರ್ಯಕ್ರಮಗಳ ಮೂಲಕ ಎಚ್ಚರಿಕೆಯನ್ನೂ ನೀಡಿದೆ, ಆದರೂ ಹಿಂದಿನ ಎಲ್ಲಾ ಸರ್ಕಾರಗಳೂ ಪರಿಶಿಷ್ಟರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಿಕೊಂಡು ಅವರನ್ನು ವಂಚಿಸಿವೆ ಎಂದು ಆರೋಪಿಸಿದರು.
ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ನಿಗದಿಪಡಿಸಿರುವ ೧೧,೮೯೬,೪೫ ಕೋಟಿ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸುವ ಕುರಿತು ತೀರ್ಮಾನಿಸಿರುವುದಾಗಿ ಹೇಳಿಕೆ ನೀಡಿರುವುದನ್ನು ಖಂಡಿಸಿದ ಪದಾಧಿಕಾರಿಗಳು ಪರಿಶಿಷ್ಟ ಅಭಿವೃದ್ಧಿ ಪರಿಷತ್ತಿನ ಸಭೆ ಇದಕ್ಕೆ ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿದರು.
ಕಳೆದ ಸಾಲಿನಲ್ಲಿ ಗ್ಯಾರೆಂಟಿ ಯೋಜನೆಗಳಿಗಾಗಿ ಖಜಾನೆಗೆ ನೀಡಿರುವ೧೧,೧೧೪ ಕೋಟಿ ಮತ್ತು ೧೪,೨೮೨,೩೮ ಕೋಟಿ ಪರಿಶಿಷ್ಟರ ಹಣವನ್ನು ರಾಜ್ಯ ಸರ್ಕಾರ ಹಿಂಪಡೆದು ಅದನ್ನು ಪರಿಶಿಷ್ಟರ ಅಭಿವೃದ್ಧಿ ಯೋಜನೆಗಳಾದ ಭೂ ಒಡೆತನ, ಕೊಳವೆಬಾವಿ ನಿರ್ಮಾಣ, ಪರಿಶಿಷ್ಟರ ಜಮೀನಿಗೆ ರಸ್ತೆ ನಿರ್ಮಾಣ, ನೀರಾವರಿ ವ್ಯವಸ್ಥೆ, ಮನೆ ನಿರ್ಮಾಣ ಕಾಮಗಾರಿಗಳಿಗೆ ಬಳಸಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು, ಪ್ರತಿ ವರ್ಷ ಬಿಡುಗಡೆಯಾದ ಹಣ ಮತ್ತು ಖರ್ಚಾಗಿರುವ ಹಣದ ವಿವರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕು, ಬ್ಯಾಕ್ ಲಾಗ್ ಹುದ್ದೆಗಳನ್ನು ಕಾಲಕಾಲಕ್ಕೆ ರಾಜ್ಯ ಸರ್ಕಾರ ನಿಗದಿಪಡಿಸುವ ಒಳ ಮೀಸಲಾತಿ ನಿಯಮದಂತೆ ಆಯಾ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ತುಂಬಬೇಕು ಎಂದು ಆಗ್ರಹಿಸಿದರು.
Appeal to Additional District Magistrate from Karnataka Dalit Sangharsh Samiti
Leave a comment