ಚಿಕ್ಕಮಗಳೂರು: ಅಕ್ರಮವಾಗಿ ವಲಸೆ ಬಂದು ಜಿಲ್ಲೆಯಲ್ಲಿ ನೆಲೆಸಿರುವ ಬಾಂಗ್ಲಾದೇಶೀಯರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಅವರನ್ನು ಶನಿವಾರ ಭೇಟಿ ಮಾಡಿದ ಸಂಘಟನೆಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ಅಕ್ರಮವಾಗಿ ವಲಸೆ ಬಂದಿರುವ ಬಾಂಗ್ಲಾದೇಶೀಯರು ಜಿಲ್ಲೆಯ ಕಾರ್ಖಾನೆಗಳಲ್ಲಿ, ಹೋಟೆಲ್ ಗಳಲ್ಲಿ, ಕಾಫಿ ತೋಟಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿದ್ದಾರೆ, ಅವರಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ, ಬಾಂಗ್ಲಾದೇಶಿಯರು ಮತ್ತು ಹೊರರಾಜ್ಯಗಳ ಕಾರ್ಮಿಕರು ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಾರೆ ಎಂಬ ಆಸೆಯಿಂದ ಅವರ ಪೂರ್ವಾಪರಗಳನ್ನು, ದಾಖಲೆಗಳನ್ನು ಪರಿಶೀಲಿಸದೇ ಕಾರ್ಮಿಕರಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಈ ಬೆಳವಣಿಗೆ ಸದ್ಯಕ್ಕೆ, ಆರಂಭದಲ್ಲಿ ಚೆನ್ನಾಗಿ ಕಂಡರೂ ಭವಿಷ್ಯದಲ್ಲಿ ಅದು ಜಿಲ್ಲೆಗೆ, ಮಲೆನಾಡಿಗೆ ಮಾರಕವಾಗಲಿದೆ, ಬಾಂಗ್ಲಾದೇಶಿಯರು ಮತ್ತು ಹೊರರಾಜ್ಯಗಳ ಕಾರ್ಮಿಕರು ಜಿಲ್ಲೆಯಲ್ಲಿ ನೆಲೆಸಿದ ದಿನದಿಂದ ಅಕ್ರಮ ಚಟುವಟಿಕೆಗಳು, ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದರು.
ಬಾಂಗ್ಲಾದೇಶಿಯರು ಮತ್ತು ಹೊರರಾಜ್ಯಗಳ ಕಾರ್ಮಿಕರಿಗೆ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಗಳನ್ನು ಜಿಲ್ಲೆಯಲ್ಲಿ ನೀಡುವ ಕೆಲಸ ಅವ್ಯಾಹತವಾಗಿ ನಡೆಯುತ್ತಿದ್ದು ಆ ಜಾಲವನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾಡಳಿತ ಬಾಂಗ್ಲಾದೇಶಿಯರು ಮತ್ತು ಹೊರರಾಜ್ಯಗಳ ಕಾರ್ಮಿಕರನ್ನು ಪತ್ತೆ ಹಚ್ಚಿ ಅವರ ದಾಖಲೆಗಳನ್ನು, ಪೂರ್ವಾ ಪರಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು, ಬಾಂಗ್ಲಾ ವಲಸಿಗರನ್ನು ಮತ್ತು ಹೊರರಾಜ್ಯಗಳ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿರುವ ಮಾಲೀಕರು ಅವರ ಮಾಹಿತಿಯನ್ನು ಮತ್ತು ಪೂರ್ತಿ ದಾಖಲೆಗಳನ್ನು ಪೊಲೀಸ್ ಠಾಣೆಗಳಿಗೆ, ಸಂಬಂಧಪಟ್ಟ ಇಲಾಖೆಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸೋಮುನಾಯಕ್, ಜಿಲ್ಲಾಧ್ಯಕ್ಷ ಪಿ.ಕುಮಾರ್, ತಾಲೂಕು ಅಧ್ಯಕ್ಷ ಪ್ರಕಾಶ್, ಪದಾಧಿಕಾರಿಗಳಾದ ಶಶಿ ನಾಯಕ್, ರವಿಕುಮಾರ್, ಎಂ.ಕೆ. ಸುರೇಶ್ ಹಾಜರಿದ್ದರು.
Appeal to take action against illegal immigrants
Leave a comment