ಚಿಕ್ಕಮಗಳೂರು: ಕಾಫಿನಾಡನ್ನು ಬೆಚ್ಚಿ ಬೀಳಿಸಿದ್ದ ಬಾರ್ ಮಾಲೀಕ ತೇಜಸ್ವಿ ಕುಮಾರ್ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತನ ಸಹೋದರ ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರು ರುದ್ರ, ವೀರ ಶೇಖರ್, ವಿನಿ ಹಾಗೂ ಹನುಮಂತ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ರುದ್ರ ಕೋಲ್ಕತ್ತಾ ಮೂಲದವನಾಗಿದ್ದರೆ, ವೀರಶೇಖರ್ ಆಂಧ್ರಪ್ರದೇಶದ ಅದೋನಿಯವನು, ವಿನಿ ತುಮಕೂರು ಜಿಲ್ಲೆಯವನು ಹಾಗೂ ಹನುಮಂತ ಸ್ಥಳೀಯ ನಿವಾಸಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಬಾರಿನಲ್ಲಿ ನಡೆದ ಕ್ಷುಲ್ಲಕ ಕಾರಣದ ಜಗಳವೇ ಈ ಹತ್ಯೆಗೆ ಕಾರಣ ಎನ್ನಲಾಗಿದ್ದು, ಆರೋಪಿಗಳು ತೇಜಸ್ವಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ತೇಜಸ್ವಿ, ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಬಂಧಿತ ನಾಲ್ವರು ಆರೋಪಿಗಳನ್ನು ಪೊಲೀಸರು ಇಂದು ಕೃತ್ಯ ನಡೆದ ಬಾರ್ಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಹತ್ಯೆಯ ಹಿಂದಿನ ನಿಖರ ಕಾರಣಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.
Bar owner Tejaswi Kumar murdered – four accused arrested
Leave a comment