ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಘಟನೆ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿ ದಂಪತಿ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರು ನದಿಗೆ ಉರುಳುತ್ತಿದ್ದಂತೆಯೇ ನದಿ ಮಧ್ಯದಲ್ಲಿದ್ದ ಬೃಹತ್ ಬಂಡೆಗಲ್ಲಿಗೆ ಸಿಲುಕಿ ನಿಂತಿದೆ.
ಹೀಗಾಗಿ ರಭಸವಾಗಿ ಹರಿಯುತ್ತಿದ್ದ ನದಿಯ ನೀರಿನಲ್ಲಿ ಕೊಚ್ಚಿಹೋಗಬೇಕಿದ್ದ ದಂಪತಿ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದ ದಂಪತಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಸೋಮಾವತಿ ನದಿ ರಭಸವಾಗಿ ಹರಿಯುತ್ತಿದ್ದ ಹಿನ್ನೆಲೆಯಲ್ಲಿ, ಒಂದು ವೇಳೆ ಆ ಬಂಡೆಗಲ್ಲು ಕಾರಿಗೆ ಅಡ್ಡಬರದೇ ಹೋಗಿದ್ದರೆ ದಂಪತಿ ಕಾರಿನ ಸಮೇತ ನೀರಿನ ಸೆಳೆತಕ್ಕೆ ಕೊಚ್ಚಿಹೋಗುವ ಸಾಧ್ಯತೆಯಿತ್ತು ಎನ್ನಲಾಗಿದೆ. ಇನ್ನು ಈ ಸೇತುವೆ ಅಪಾಯಕಾರಿ ಸ್ಥಿತಿಯಲ್ಲಿದ್ದು, ತಡೆಗೋಡೆ ಇಲ್ಲದ ಕಾರಣ ವರ್ಷಕ್ಕೆ ಸರಾಸರಿ ಮೂರರಿಂದ ನಾಲ್ಕು ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರವಾಸಿಗರು ಹಾಗೂ ಸಾರ್ವಜನಿಕರು ಸಂಚರಿಸುವ ಈ ಸೇತುವೆಗೆ ತಕ್ಷಣ ತಡೆಗೋಡೆ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.
Car loses control and falls into Somavati river
Leave a comment