ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಬೆರಳೆಣಿಕೆಯಷ್ಟು ಯೋಜನೆಗಳು ಮಾತ್ರ ಲಭಿಸುವೆ. ಪ್ರವಾಸೋದ್ಯಮ ಮತ್ತು ಸಾರಿಗೆ ಕ್ಷೇತ್ರಕ್ಕೆ ಪೂರಕವಾದ ಕೆಲವು ಪ್ರಮುಖ ಘೋಷಣೆಗಳು ಹೊರಬಿದ್ದಿದ್ದರೂ, ಜಿಲ್ಲೆಯ ಬೆನ್ನೆಲುಬಾಗಿರುವ ಕೃಷಿ, ಕಾಫಿ ಉದ್ಯಮ ಮತ್ತು ಮಲೆನಾಡಿನ ಮೂಲಭೂತ ಸಮಸ್ಯೆಗಳನ್ನು ಬಜೆಟ್ನಲ್ಲಿ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬ ಮಾತುಗಳು ವ್ಯಕ್ತವಾಗಿದೆ.
ಜಿಲ್ಲೆಯ ಪ್ರವಾಸೋದ್ಯಮವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸುವ ಉದ್ದೇಶದಿಂದ ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿಗೆ ರೋಪ್ ವೇ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಇದರೊಂದಿಗೆ ಬಹುಕಾಲದ ಬೇಡಿಕೆಯಾದ ಚಿಕ್ಕಮಗಳೂರು ಬೇಲೂರು-ಹಾಸನ ರೈಲ್ವೆ ಮಾರ್ಗಕ್ಕೆ ಭೂಸ್ವಾಧೀನದ ಪೂರ್ಣ ವೆಚ್ಚ ಹಾಗೂ ಶೇ. 50 ರಷ್ಟು ನಿರ್ಮಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಘೋಷಿಸಿರುವುದು ಜಿಲ್ಲೆಯ ಸಂಪರ್ಕ ವ್ಯವಸ್ಥೆಗೆ ಹೊಸ ಆಯಾಮ ನೀಡಲಿದೆ. ಆರೋಗ್ಯ ಕ್ಷೇತ್ರದಲ್ಲಿ ಇಎಸ್ಐ ಆಸ್ಪತ್ರೆಯ ಉನ್ನತೀಕರಣ ಹಾಗೂ ಕಡೂರು ಭಾಗದ 25 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುದಾನ ಸಿಕ್ಕಿರುವುದು ರೈತರಿಗೆ ತುಸು ಸಮಾಧಾನ ತಂದಿದೆ.
ಆದರೆ ಈ ಘೋಷಣೆಗಳ ನಡುವೆ ಜಿಲ್ಲೆಯ ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದು ಜಿಲ್ಲೆಯ ಜನರಿಗೆ ನಿರಾಶೆ ಮೂಡಿಸಿದೆ. ಕಾಡುಪ್ರಾಣಿ ಮತ್ತು ಮಾನವ ಸಂಘರ್ಷ ಜಿಲ್ಲೆಯಲ್ಲಿ ತಾರಕಕ್ಕೇರಿದ್ದರೂ, ಈ ನಿಟ್ಟಿನಲ್ಲಿ ಯಾವುದೇ ವಿಶೇಷ ಅನುದಾನ ಅಥವಾ ಪರಿಹಾರ ಯೋಜನೆಗಳನ್ನು ಘೋಷಿಸಿಲ್ಲ. ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ಮಲೆನಾಡಿನ ಹಳ್ಳಿಗಳು ಮತ್ತು ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಸಿಗುವ ನಿರೀಕ್ಷೆ ಹುಸಿಯಾಗಿದೆ. ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವ ಯಾವುದೇ ಹೊಸ ಕ್ರಮಗಳನ್ನು ಕೈಗೊಳ್ಳದಿರುವುದು ಬೆಳೆಗಾರರ ಕೆಂಗಣ್ಣಿಗೆ ಗುರಿಯಾಗಿದೆ. ಕೈಗಾರಿಕಾ ಪ್ರಗತಿಗೂ ಬಜೆಟ್ನಲ್ಲಿ ಹಿನ್ನಡೆಯಾಗಿದ್ದು,
ಹಿರೇಗೌಜ ಮತ್ತು ಚೀಲನಹಳ್ಳಿ ಬಳಿ ಜವಳಿ ಪಾರ್ಕ್ ಸ್ಥಾಪಿಸಲು ಜಿಲ್ಲಾಡಳಿತ ಸಲ್ಲಿಸಿದ್ದ ಪ್ರಸ್ತಾವನೆಗೆ ಬಜೆಟ್ನಲ್ಲಿ ಮನ್ನಣೆ ಸಿಕ್ಕಿಲ್ಲ. ಮೂಡಿಗೆರೆಯಲ್ಲಿ ಆರಂಭವಾಗಿರುವ ಸ್ಟೈಸ್ ಪಾರ್ಕ್ ಕಾಮಗಾರಿಗೆ ಹೆಚ್ಚಿನ ಅನುದಾನದ ನಿರೀಕ್ಷೆಯೂ ಈ ಬಾರಿ ಸಾಕಾರಗೊಂಡಿಲ್ಲ. ಒಟ್ಟಾರೆಯಾಗಿ ಹೇಳುವುದಾದರೆ, ಕೆಲವು ದೊಡ್ಡ ಯೋಜನೆಗಳ ಮೂಲಕ ಜಿಲ್ಲೆಯನ್ನು ಪ್ರವಾಸೋದ್ಯಮ ಭೂಪಟದಲ್ಲಿ ಮಿಂಚಿಸಲು ಸರ್ಕಾರ ಮುಂದಾಗಿದ್ದರೂ, ದಿನನಿತ್ಯದ ಬದುಕಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಬೇಕಾದ ಆರ್ಥಿಕ ಶಕ್ತಿಯನ್ನು ಒದಗಿಸುವಲ್ಲಿ ಬಜೆಟ್ ವಿಫಲವಾಗಿದೆ ಜಿಲ್ಲೆಯ ಐದು ಕ್ಷೇತ್ರದಲ್ಲೂ ಕೈ ಶಾಸಕರಿದ್ದರು ಯಾವುದೇ ಜನಪರ ಯೋಜನೆಗಳು ಜಾರಿಯಾಗಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ.
Chikmagalur district completely ignored in the state budget
Leave a comment