ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ವಿಳಂಬ ಮಾಡದೆ, ನಿಗದಿತ ಅವಧಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಭವಾರ್ ಸಿಂಗ್ ಮೀನಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ನಗರ ಸ್ಥಳೀಯ ಸಂಸ್ಥೆಗಳ ಅಮೃತ್ 2.0 ಹಾಗೂ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಯಾವುದೇ ಕಾರಣಕ್ಕೂ ಕಾಮಗಾರಿಗಳ ವಿಳಂಬಕ್ಕೆ ಅವಕಾಶ ನೀಡಬಾರದು.
ಒಪ್ಪಂದದ ಅವಧಿಯೊಳಗೆ ಕೆಲಸ ಮುಗಿಯಬೇಕು. ಪೈಪ್ಲೈನ್ ಅಳವಡಿಸುವ ಸಂದರ್ಭದಲ್ಲಿ ಸಾರ್ವಜನಿಕರ ಹಾಲಿ ಇರುವ ಪೈಪ್ಲೈನ್ಗಳು ಒಡೆದು ಹೋದರೆ ತಕ್ಷಣವೇ ಸರಿಪಡಿಸಬೇಕು. ಕಾಮಗಾರಿಗಾಗಿ ರಸ್ತೆ ಅಗಿದಿದ್ದರೆ, ತಕ್ಷಣವೇ ಅದನ್ನು ಮರು ಸ್ಥಾಪಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಸಹಕಾರ ನೀಡಬೇಕು. ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿದಾಗ ಈಗಾಗಲೇ ಮುಕ್ತಾಯಗೊಂಡಿರುವ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸಲಾಗುವುದು. ವಿವಿಧ ಇಲಾಖೆಗಳಿಂದ ಬರಬೇಕಾದ ನಿರಾಕ್ಷೇಪಣಾ ಪತ್ರಗಳನ್ನು ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ತಕ್ಷಣವೇ ಪಡೆದುಕೊಳ್ಳುವಂತೆ ಮಂಡಳಿಯ ಕಾರ್ಯಪಾಲಕ ಎಂಜಿನಿಯರ್ ಉಮೇಶ್ ಅವರಿಗೆ ಸೂಚಿಸಿದರು.
ನಂತರ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಾದ 15ನೇ ಹಣಕಾಸು, ನಗರೋತ್ಥಾನ, ಎಸ್ಬಿಎಂ, ಕುಡಿಯುವ ನೀರಿನ ಯೋಜನೆಗಳಡಿ ಮಂಜೂರಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಅಭಿಯಂತರರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪೌರಾಯುಕ್ತರು ಹಾಗೂ ಮುಖ್ಯಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಆಸ್ತಿ ತೆರಿಗೆ, ನೀರಿನ ತೆರಿಗೆ, ವಾಣಿಜ್ಯ ಮಳಿಗೆಗಳ ಬಾಡಿಗೆ ಹಾಗೂ ಉದ್ಯಮೆ ತೆರಿಗೆಗಳ ಬಾಕಿ ಮೊತ್ತವನ್ನು ಸಂಪೂರ್ಣವಾಗಿ ವಸೂಲಿ ಮಾಡಬೇಕು. ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳಿಂದ ನೀಡುತ್ತಿರುವ ಹಲವು ಸೇವೆಗಳಿಗೆ ಶುಲ್ಕವನ್ನೇ ವಿಧಿಸುತ್ತಿಲ್ಲ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.
ಘನತ್ಯಾಜ್ಯ ವಸ್ತು ನಿಯಮಗಳು-2026ರ ಅನುಷ್ಠಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮತ್ತು ಸಾರ್ವಜನಿಕರಿಗೆ ಒದಗಿಸಬೇಕಾದ ಆನ್ಲೈನ್ ಸೇವೆಗಳನ್ನು ನಿಗದಿತ ಅವಧಿಯೊಳಗೆ ಒದಗಿಸಲು ಸೂಚನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗೋಪಾಲ್ ಜಾಧವ್, ಕಾರ್ಯಪಾಲಕ ಅಭಿಯಂತರರು, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳ ಚರಂಡಿ ಮಂಡಳಿ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.
Complete the Amrit 2.0 work quickly.
Leave a comment