ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಸವಣ್ಣ ಸೇರಿದಂತೆ ಶಿವಶರಣರ ಆಶಯದಂತೆ ನಡೆದುಕೊಳ್ಳುತ್ತಿದೆ ಎಂದು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದ ಮೂರು ದಿನಗಳ ಪರಿಷತ್ತಿನ ‘40ರ ಸಂಭ್ರಮ’ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಮಾತ್ರವಲ್ಲ, ಅವರ ಆಶಯಗಳಂತೆ ಕಾರ್ಯನಿರ್ವಹಿಸುವ ಮೂಲಕ ಸಮಾಜದ ಎಲ್ಲಾ ವರ್ಗದವರ ನೆರವಿಗೆ ಧಾವಿಸಿದೆ,” ಎಂದರು.
“ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ‘ಮನರೆಗಾ’ ಯೋಜನೆ ಬಸವಣ್ಣರಾದಿಯಾಗಿ ಶಿವಶರಣರು ಕಾಯಕ ದಾಸೋಹದ ಪ್ರತೀಕ. ಎಲ್ಲರಿಗೂ ಕೆಲಸ ಸಿಗೇಕು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿತ್ತು. ಅದೇ ರೀತಿ ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಅನುಷ್ಠಾನಕ್ಕೆ ತಂದಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಹಿಂದೆ ಶರಣರ ಆಶಯಗಳನ್ನು ಜಾರಿಗೊಳಿಸುವ ಬದ್ಧತೆ ಇದೆ,” ಎಂದು ತಿಳಿಸಿದರು.
“ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆದರ್ಶ ಬದುಕು ರೂಪಿಸಿಕೊಳ್ಳಬಹುದು. ಹೀಗಾಗಿ ಶರಣರ ವಿಚಾರಧಾರೆಗಳು ಕೇವಲ ವೀರಶೈವರಿಗೆ ಸೀಮಿತವಾಗದೆ ರಾಜ್ಯಾದ್ಯಂತ ಎಲ್ಲರಿಗೂ ತಲುಪಿಸಿ ಅದನ್ನು ಅನುಷ್ಠಾನಕ್ಕೆ ತರುವ ಕೆಲಸ ಆಗಬೇಕು. ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯ ಮತ್ತು ಹೊರದೇಶದಲ್ಲಿ ಶರಣರ ತತ್ತ್ವಗಳನ್ನು ಪ್ರಚಾರ ಮಾಡುವ ನಿಟ್ಟಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ರೂಪಿಸಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತದೆ,” ಎಂದು ಹೇಳಿದರು.
ಇದೇ ವೇಳೆ ಸಚಿವ ಕೆ.ಜೆ.ಜಾರ್ಜ್ ಅವರು ಡಾ.ಬಸವರಾಜ ಸಾದರ ಅವರ “ಕಾಯಕಾರ್ಥ ಕ್ರಾಂತಿ” ಪುಸಕ್ತ ಬಿಡುಗಡೆ ಮಾಡಿದರು. ಶಾಸಕ ಎಚ್.ಡಿ. ತಮ್ಮಯ್ಯ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸೋಮಶೇಖರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಸ್ವಾಮಿ, ಎಐಸಿಸಿ ಸದಸ್ಯ ಬಿ.ಎಂ.ಸಂದೀಪ್, ಸಿಡಿಎ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಕಾಂಗ್ರೆಸ್ ಮುಖಂಡ ಎಂ.ಎಲ್ ಮೂರ್ತಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ,
ಮಾಜಿ ಸಚಿವ ಬಿ.ಬಿ.ಲಿಂಗಯ್ಯ, ಸಾಹಿತಿ ಬಸವರಾಜ ಸಾದರ, ಬಿಜೆಪಿ ಮುಖಂಡ ಕಲ್ಮಡಪ್ಪ, ಪೂಚಂತೆ ಪ್ರತಿಷ್ಠಾನದ ಸದಸ್ಯ ರುದ್ರಸ್ವಾಮಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವೀಶ್ ಕ್ಯಾತನಬೀಡು, ಸುಶೀಲಾ ಸೋಮಶೇಖರ್ ಮತ್ತಿತರು ಪಾಲ್ಗೊಂಡಿದ್ದರು.
Congress government’s program as per Shiv Sharan’s wishes
Leave a comment