ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ, ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೌದ್ಧ ವಿಹಾರ ನಿರ್ಮಾಣಕ್ಕೆ ಗವನಹಳ್ಳಿ ಸರ್ವೇ ನಂಬರ್ 93ರಲ್ಲೇ ಜಾಗ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.
ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆದ ಸ್ಥಳದಲ್ಲೇ ಪ್ರತಿಭಟನೆಗೆ ಕುಳಿತ ದಲಿತ ಸಂಘಟನೆಗಳ ಮುಖಂಡರು, ಹಲವು ವರ್ಷಗಳಿಂದ ಜಾಗ ನೀಡುವುದಾಗಿ ಸರ್ಕಾರ ಭರವಸೆ ನೀಡುತ್ತಲೇ ಬಂದಿದ್ದರೂ ಈವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿದರು.
ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೌದ್ಧ ವಿಹಾರ ನಿರ್ಮಾಣಕ್ಕೆ ಬೇರೆ ಯಾವುದೇ ಸ್ಥಳದಲ್ಲಿ ಜಾಗ ನೀಡುವುದು ನಮಗೆ ಒಪ್ಪಿಗೆಯಿಲ್ಲ. ಗವನಹಳ್ಳಿ ಸರ್ವೇ ನಂಬರ್ 93ರಲ್ಲೇ ಜಾಗ ಮಂಜೂರು ಮಾಡಬೇಕು ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದರು.
ಈ ಜಾಗದ ವಿಚಾರ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಪ್ರತಿಬಾರಿಯೂ ಜಾಗ ನೀಡುವುದಾಗಿ ಭರವಸೆ ನೀಡಲಾಗುತ್ತಿದೆ. ಆದರೆ ಭರವಸೆ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ನಿಗದಿತ ಸ್ಥಳದಲ್ಲೇ ಶೀಘ್ರವಾಗಿ ಜಾಗ ಮಂಜೂರು ಮಾಡುವ ಮೂಲಕ ಸರ್ಕಾರ ತನ್ನ ಭರವಸೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನಡೆದ ಭಾಷಣದಲ್ಲಿ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಜಾಗದ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವುದನ್ನು ಪ್ರತಿಭಟನಾಕಾರರು ಉಲ್ಲೇಖಿಸಿದರು. ಕಾರ್ಯಕ್ರಮದ ಬಳಿಕ ಸಚಿವ ಜಾರ್ಜ್ ಅವರನ್ನು ಭೇಟಿ ಮಾಡಿ ಈ ಕುರಿತು ನೇರವಾಗಿ ಚರ್ಚಿಸಲು ಅವಕಾಶ ನೀಡಬೇಕೆಂದು ದಲಿತ ಸಂಘಟನೆಗಳ ಮುಖಂಡರು ಮನವಿ ಮಾಡಿದರು.
ಸರ್ಕಾರ ಇನ್ನು ವಿಳಂಬ ಮಾಡದೆ ಗವನಹಳ್ಳಿ ಸರ್ವೇ ನಂಬರ್ 93ರಲ್ಲೇ ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೌದ್ಧ ವಿಹಾರ ನಿರ್ಮಾಣಕ್ಕೆ ಅಗತ್ಯ ಜಾಗವನ್ನು ಶೀಘ್ರ ಮಂಜೂರು ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮಾರ್ಲೆ ಅಣ್ಣಯ್ಯ, ಬಾಚೇನಹಳ್ಳಿ ಮಂಜಯ್ಯ, ಶ್ರೀನಿವಾಸ್, ಗಣೇಶ, ಹೇಮಂತ, ರಾಕೇಶ್, ನಾಗೇಶ, ಶೇಖರ್, ಅಶೋಕ, ಚಂದ್ರು ಹಾಗೂ ಚಿದಾನಂದ ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Dalit organizations protest on Independence Day
Leave a comment