ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಜನವರಿ ೧೭ ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜನವರಿ ೨ ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಜ.೯ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಪ್ರತೀ ದಿನ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳನ್ನು ಸಲ್ಲಿಸಬಹುದು.
ಜನವರಿ ೧೦ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅನಂತರ ಸಿಂಧುತ್ವ ಹೊಂದಿರುವ ನಾಮ ನಿರ್ದೇಶಿತ ಅಭ್ಯರ್ಥಿಗಳ ಪಟ್ಟಿಯನ್ನು ಚುನಾವಣಾಧಿಕಾರಿಗಳು ಬ್ಯಾಂಕ್ನ ನೂತನ ಆಡಳಿತ ಕಚೇರಿಯ ಕೊಠಡಿ ಸಂಖ್ಯೆ ೧ ರಲ್ಲಿರುವ ಸೂಚನಾ ಫಲಕದಲ್ಲಿ ಪ್ರಕಟಿಲಿದ್ದಾರೆ.
ಜನವರಿ ೧೧ ರಂದು (ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ) ಉಮೇದುವಾರರು ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಅಂದೇ ಮಧ್ಯಾಹ್ನ ೨ ಗಂಟೆಯ ಬಳಿಕ ಚುನಾವಣಾಧಿಕಾರಿಗಳು ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸಲಿದ್ದಾರೆ. ಅಗತ್ಯವಿದ್ದಲ್ಲಿ ಅಂದು ಮಧ್ಯಾಹ್ನ ೩ ಗಂಟೆಯ ಬಳಿಕ ಚುನಾವಣಾಧಿಕಾರಿಗಳಿಂದ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆ ನಡೆಯಲಿದ್ದು, ಅನಂತರ ಸೂಚನಾ ಫಲಕದಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಚಿಹ್ನೆಯೊಂದಿಗೆ ಪ್ರಕಟಿಸಲಾಗುವುದು.
ಜನವರಿ ೧೭ ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನೂತನ ಕಟ್ಟಡದಲ್ಲಿ ಮತದಾನ ನಡೆಯಲಿದ್ದು, ಮತದಾನ ಮುಕ್ತಾಯವಾದ ಬಳಿಕ ಅದೇ ಸ್ಥಳದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಎಣಿಕೆ ಕಾರ್ಯ ಪೂರ್ಣಗೊಂಡ ಬಳಿಕ ಚುನಾವಣಾ ಫಲಿತಾಂಶವನ್ನು ಘೋಷಣೆ ಮಾಡಲಾಗುವುದು ಎಂದು ಚುನಾವಣಾಧಿಕಾರಿಗಳಾದ ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.
DCC Bank election schedule announced
Leave a comment