ಚಿಕ್ಕಮಗಳೂರು: ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ ಸಿ ವರ್ಗದಲ್ಲಿರುವ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯದವರಿಗೂ ಶೇ.೬ ರಷ್ಟು ಮೀಸಲಾತಿ ನಿಗದಿಗೊಳಿಸಬೇಕು ಎಂದು ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಟಿ.ಎಲ್.ಲಕ್ಷ್ಮಣ ನಾಯ್ಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸದಾಶಿವ ಆಯೋಗ, ಮಾಧುಸ್ವಾಮಿ ವರದಿ ಹಾಗೂ ನಾಗಮೋಹನದಾಸ್ ಆಯೋಗದ ವರದಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನಿಗದಿಗೊಳಿಸಿರುವಾಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದೇ ದೃಷ್ಟಿಕೋನದಿಂದಲೂ ಹೊಂದಾಣಿಕೆ ಆಗದ ಅಲೆಮಾರಿ ಸಮುದಾಯವನ್ನು, ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳೊಂದಿಗೆ ಸೇರಿಸಿರುವ ಉದ್ದೇಶವೇನು ಎಂದು ಪ್ರಶ್ನಿಸಿದ ಅವರು, ಹಲವು ಆಯೋಗಗಳ ವರದಿಯಲ್ಲಿ ಶಿಫಾರಸ್ಸು ಮಾಡಿರುವಂತೆ ಅಲೆಮಾರಿ ಸಮುದಾಯಗಳಿಗೂ ಶೇಕಡ ಒಂದರಷ್ಟು ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ನೇಮಕಗೊಂಡಿದ್ದ ನಾಗಮೋಹನ್ದಾಸ್ ಏಕ ಸದಸ್ಯ ಪೀಠದ ಅಯೋಗವು ಸುಪ್ರೀಂಕೋರ್ಟ್ನ ಮಾನದಂಡಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ, ಶಿಕ್ಷಣ ಉದ್ಯೋಗ ಸಾಮಾಜಿಕ, ಹಾಗೂ ಆರ್ಥಿಕ ಸ್ಥಿತಿಗತಿಯ ಅಂಕಿ-ಸಂಖ್ಯೆಗಳು ಧಮನಿತ ಸಮುದಾಯಗಳ ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿದರು.
ನಾಗಮೋಹನ್ದಾಸ್ ವರದಿಯಲ್ಲೇ ತಿಳಿಸಿರುವಂತೆ ಸರ್ಕಾರದ ಕೆಲವು ಇಲಾಖೆಗಳು ಪರಿಶಿಷ್ಟ ಜಾತಿಯ ಅಂಕಿ-ಸಂಖ್ಯೆಗಳು ನೀಡಿಲ್ಲದಿರುವುದು ಸ್ಪಷ್ಟಪಡಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೆಲವು ಕುಟುಂಬಗಳು ಅಲಭ್ಯ ಇರುವುದರಿಂದ ಸಮೀಕ್ಷೆ ಅಪೂರ್ಣವಾಗಿದೆ ಎಂದು ತಿಳಿಸಿರುವಾಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಈ ಅಪೂರ್ಣ ವರದಿಯನ್ನೇ ಬದಲಾವಣೆಯೊಂದಿಗೆ ಕೆಲವು ಸಂಪುಟ ಸಚಿವರುಗಳೊಂದಿಗೆ ರಾಜಿ ಪಂಚಾಯತಿ ನಡೆಸಿ ಜಾರಿಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದರು.
ನಾಗಮೋಹನ್ದಾಸ್ರವರು ಜಾತಿಗಳನ್ನು ವಿಂಗಡಿಸುವಾಗ ಸ್ಪೃಷ್ಯ ಹಾಗೂ ಅಸ್ಪೃಶ್ಯ ಎಂದು ಅಸಂವಿಧಾನಕ ಪದ ಬಳಕೆ ಮಾಡಿರುವುದರ ಹಿಂದೆ ಯಾವ ತಂತ್ರಗಾರಿಕೆ ಇದೆ ಎಂದು ಅನುಮಾನಿಸಿದ ಅವರು, ಈ ರೀತಿ ವಿಂಗಡಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಬಂಜಾರ ಅಭಿವೃದ್ಧಿ ಸಂಘದ ಅಧ್ಯಕ್ಷ ಗಂಗಾಧರ ನಾಯ್ಕ, ತರೀಕೆರೆ ತಾಲ್ಲೂಕು ಅಧ್ಯಕ್ಷ ಹೆಚ್.ಎಲ್.ಮಂಜುನಾಥ, ಕಡೂರು ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ ನಾಯ್ಕ, ಜಿಲ್ಲಾ ಗೌರವಾಧ್ಯಕ್ಷ ಬಿ.ಟಿ.ಗಂಗಾಧರ ನಾಯ್ಕ, ಮುಖಂಡ ರಾಜನಾಯ್ಕ ಇತರರು ಉಪಸ್ಥಿತರಿದ್ದರು.
Demand for 6% reservation for the Koracha and Korama communities of category C
Leave a comment