ಚಿಕ್ಕಮಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಮುಖರು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ನಿರೀಕ್ಷಕ ಅಭಯ ಪ್ರಕಾಶ ಸೋಮನಾಳ ಅವರಿಗೆ ದೂರು ನೀಡಿದರು.
ಯಶಪಾಲ್ ಸುವರ್ಣ ಅವರು ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡುವಾಗ, ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಸುಳ್ಳು ಅಪಪ್ರಚಾರ ಮಾಡಿ ಜನರಲ್ಲಿ ತಪ್ಪು ಭಾವನೆ ಬರುವಂತೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಲ್ಲದೆ ಮುಸ್ಲಿಮರ ಬಾಬರಿ ಮಸೀದಿಯನ್ನು ಧ್ವಂಸ ಮಾಡಿ ಸಂಭ್ರಮಿಸಿದ್ದೇವೆ. ಈಗ ರಾಹುಲ್ ಗಾಂಧಿ ಅವರ ವಂಶವನ್ನು ಬಾಬರಿ ಮಸೀದಿ ಧ್ವಂಸ ಮಾಡಿದ ರೀತಿಯಲ್ಲೇ ಧ್ವಂಸ ಮಾಡುತ್ತೇವೆ ಎನ್ನುವ ಮೂಲಕ ಇಡೀ ಕುಟುಂಬಕ್ಕೆ ಬೆದರಿಕೆ ಒಡ್ಡಿದ್ದಾರೆ. ಈ ಮೂಲಕ ದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡುವ ಕೆಲಸ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಧರ್ಮ ಧರ್ಮಗಳ ಮಧ್ಯೆ ಅಶಾಂತಿ ಸೃಷ್ಟಿ ಮಾಡಿ ಸಾರ್ವಜನಿಕರನ್ನು ಪ್ರಚೋದಿಸುವ ಜೊತೆಗೆ, ನೀಟ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾರೆ. ಹೀಗಾಗಿ ಯಶಪಾಲ್ ಸುವರ್ಣ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ದೂರು ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಉಪಾಧ್ಯಕ್ಷ ಆರ್ ಚಂದ್ರು, ಪ್ರಮುಖರಾದ ಪ್ರವೀಣ್ ಬೆಟಗೆರೆ, ಹನೀಫ್ ಮತ್ತಿತರರಿದ್ದರು.
Demand for action against BJP MLA Yashpal Suvarna
Leave a comment