ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ೨೦೨೬-೨೭ನೇ ಸಾಲಿನ ಪ್ರಕೃತಿ ವಿಕೋಪ ನಿರ್ವಹಣೆಯ ತಯಾರಿ ಕುರಿತು ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಯೋಜನೆ ರೂಪಿಸಬೇಕು. ಮೇವು ಜಿಲ್ಲೆಯಿಂದ ಬೇರೆ ಕಡೆಗೆ ಹೋಗದಂತೆ ನೋಡಿಕೊಳ್ಳಬೇಕು. ರೈತರಿಗೆ ಮೇವಿನ ಕಿಟ್ಗಳನ್ನು ವಿತರಿಸಲು ಕ್ರಮ ವಹಿಸಬೇಕಲ್ಲದೆ, ಅಮೃತ್ಮಹಲ್ ಕಾವಲಿನಲ್ಲಿ ಮೇವು ಬೆಳೆಯುವಂತೆ ತಿಳಿಸಿದರು.
ಪಶು ಸಂಗೋಪನಾ ಇಲಾಖೆ ಅಧಿಕಾರಿ ಮಾತನಾಡಿ, ಜಿಲ್ಲೆಯಲ್ಲಿ ೩೦ ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ. ಕೊಳವೆ ಬಾವಿ ಇರುವ ರೈತರಿಗೆ ಮೇವು ಕಿಟ್ಗಳನ್ನು ವಿತರಿಸಿ ಮೇವು ಬೆಳೆಯಲು ಕ್ರಮ ವಹಿಸಲಾಗುವುದು. ಮೇವಿಗೆ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಂ.ತಿರುಮಲೇಶ್ ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈವರೆಗೆ ೫೬೪೭ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಕಳೆದ ವರ್ಷ ಇದೇ ಅವಧಿಗೆ ೧೭,೧೩೮ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ರೈತರು ಹೆಸರು, ಉದ್ದು, ಅಲಸಂದೆ, ನೆಲಗಡಲೆ, ಹತ್ತಿ, ಸೂರ್ಯಕಾಂತಿ, ಎಳ್ಳು, ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆಯಾಗಿರುವ ಪೈರು ಮಳೆಯ ಕೊರತೆಯಿಂದ ಒಣಗುತ್ತಿದೆ. ಬಿತ್ತನೆಯಾಗದ ಪ್ರದೇಶದಲ್ಲಿ ರೈತರು ಭೂಮಿ ಹದ ಮಾಡಿಕೊಂಡು ಬಿತ್ತನೆ ಮಾಡಲು ಮಳೆಗಾಗಿ ಕಾಯುತ್ತಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನಿದ್ದು, ಯಾವುದೇ ಕೊರತೆ ಇರುವುದಿಲ್ಲ ಎಂದರು.
ಮತ್ತೆ ಮಾತನಾಡಿದ ಜಿಲ್ಲಾಧಿಕಾರಿಗಳು, ಬೆಳೆ ವಿಮೆ ಮಾಡಿಸಲು ರೈತರಿಗೆ ಪ್ರೇರಣೆ ನೀಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು. ಎಲ್ಲಾ ತಾಲ್ಲೂಕುಗಳಲ್ಲೂ ತಹಸೀಲ್ದಾರರು ಪ್ರತೀ ವಾರ ಸಭೆ ನಡೆಸಿ ಬಿತ್ತನೆ ವ್ಯವಸ್ಥೆ, ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸಬೇಕು. ಶಾಲಾ ಕಟ್ಟಡಗಳು, ಅಂಗನವಾಡಿ, ವಿದ್ಯಾರ್ಥಿ ನಿಲಯಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಹಾನಿಯಾಗಿರುವ ಕಟ್ಟಡಗಳನ್ನು ದುರಸ್ತಿಪಡಿಸಲು ಕ್ರಮ ವಹಿಸಬೇಕು. ರಸ್ತೆ ಪಕ್ಕದಲ್ಲಿ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ಗುಡ್ಡ ಕುಸಿತ ಉಂಟಾದರೆ, ಮರಗಳು ಬಿದ್ದು ಸಂಚಾರಕ್ಕೆ ಅಡಚಣೆಯಾಗುವ ಸಂಭಾವ್ಯ ಸ್ಥಳಗಳನ್ನು ಗುರುತಿಸಿ ಈಗಲೇ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮಾತನಾಡಿ, ೨೦ ಗ್ರಾಮ ಪಂಚಾಯಿತಿ ವ್ಯಾಪ್ರಿಯ ೨೭ ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ೮ ಹಳ್ಳಿಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇವುಗಳಲ್ಲಿ ಮೂರು ಇಲಾಖಾ ಟ್ಯಾಂಕರ್ಗಳು, ಐದು ಖಾಸಗಿ ಟ್ಯಾಂಕರ್ಗಳಾಗಿವೆ. ಉಳಿದಂತೆ ೧೯ ಖಾಸಗಿ ಬೋರ್ವೆಲ್ಗಳನ್ನು ಪಡೆದು ನೀರು ಸರಬರಾಜು ನೀಡಲಾಗುತ್ತಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಉಪವಿಭಾಗಾಧಿಕಾರಿ ನಟೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಕೆ.ಮಂಜುನಾಥ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಂಜುನಾಥ್, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
District Collector instructs to take action to prevent shortage of fodder for cattle
Leave a comment