ಚಿಕ್ಕಮಗಳೂರು: ಸಂಸ್ಕಾರದ ಮೂಲಕ ಶಿಕ್ಷಣ ಕೊಟ್ಟಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಜೊತೆಗೆ ಮಾನವೀಯ ಮೌಲ್ಯಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಭಿಪ್ರಾಯಿಸಿದರು.
ಅವರು ಇಂದು ಟಿ.ಎಂ.ಎಸ್ ಶಾಲೆಯಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಸೇವಾ ಬಳಗ ಇವರುಗಳ ಸಹಯೋಗದಲ್ಲಿ ಮಾರುತಿ ಮೆಡಿಕಲ್ಸ್ ಬೆಂಗಳೂರು ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು.
ಧರ್ಮ, ಸಂಸ್ಕೃತಿ, ಸಂರಕ್ಷಣೆಗೆ ಇನ್ನೊಬ್ಬರಿಗೆ ಹಾನಿ ಮಾಡದಂತೆ ಜಾಗೃತಿ ಮೂಡಿಸುವ ಸಮಾಜಮುಖಿ ಕೆಲಸವನ್ನು ತನ್ನದೇ ಆದ ರೀತಿಯಲ್ಲಿ ಮಾರುತಿ ಮೆಡಿಕಲ್ಸ್ನ ಮಹೇಂದ್ರ ಅವರು ಮಾಡುತ್ತಿದ್ದಾರೆಂದು ಶ್ಲಾಘಿಸಿದರು.
ಕತ್ತಲು ಕತ್ತಲು ಎಂದು ಕೂಗಾಡುವುದರಿಂದ ಬೆಳಕು ಬರುವುದಿಲ್ಲ. ಪುಟ್ಟ ಹಣತೆ ಹಚ್ಚಿದಾಗ ಬೆಳಕು ಕೊಡುತ್ತದೆ. ಹಣತೆಯಿಂದ ಹಣತೆಗಳನ್ನು ಹೆಚ್ಚಿದರೆ ಮತ್ತಷ್ಟು ಬೆಳಕಾಗುತ್ತದೆ ಎಂಬುದಕ್ಕೆ ಉಳ್ಳವರು ಬಡವರಿಗೆ ದಾನವನ್ನು ನೀಡುವ ಮೂಲಕ ನೆರವಾದರೆ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು.
ಮಾನವೀಯ ಮೌಲ್ಯಗಳ ಬಗ್ಗೆ ಕಾಲಜಿ ಇರುವ ಹಾಗೆ ಮತ್ತು ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ಪರಿಸರದ ಬಗ್ಗೆ ಅರಿವು ಮೂಡಿಸುವ ಭೂರಕ್ಷಣೆ ಮಾಡುವ ಮೂಲಕ ಸಂದೇಶ ಕೊಡುವುದನ್ನು ಮಹೇಂದ್ರ ಅವರು ಸದ್ದಿಲ್ಲದೆ ಮಾಡುತ್ತಿದ್ದಾರೆಂದು ತಿಳಿಸಿದರು.
ಜಯಕಾರ ಹಾಕಿಸಿಕೊಳ್ಳದೆ ಧಿಕ್ಕಾರ ಕೂಗದೆ ತನ್ನ ಪಾಡಿಗೆ ಈ ರೀತಿಯ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ೧ ರಿಂದ ೭ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು ೧೦ ಸಾವಿರ ವಿದ್ಯಾರ್ಥಿಗಳಿಗೆ ೬.೫ ಲಕ್ಷ ರೂ ವೆಚ್ಚದಲ್ಲಿ ನೋಟ್ ಪುಸ್ತಕಗಳನ್ನು ಮಹೇಂದ್ರ ಮನ್ನೋತ್ ನೀಡುತ್ತಿದ್ದಾರೆ ಎಂದು ಹೇಳಿದರು.
ಕೆಲಸ ಮಾಡಿ ಓಟ್ ಕೇಳುತ್ತೇವೆ. ಓಟ್ಗಾಗಿ ಇವರು ಕೆಲಸ ಮಾಡಿಲ್ಲ. ನೋಟ್ ಪುಸ್ತಕ ಕೊಟ್ಟು ಬಡ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಪ್ರಗತಿ ನಿರೀಕ್ಷಿಸಿದ್ದಾರೆ ಎಂದು ಅವರಿಗೆ ಅಭಿನಂದನೆ ಸಲ್ಲಿಸಿದರು. ನೋಟ್ ಪುಸ್ತಕಗಳ ಕೊಡುಗೆ ವಿದ್ಯಾರ್ಥಿಗಳ ಜೀವನಕ್ಕೆ ಮತ್ತು ಶಿಕ್ಷಣಕ್ಕೆ ಆಧಾರವಾಗುತ್ತದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಕಿ ಗೀತಾ ಅವರು, ಬದಲಾದ ಶೈಕ್ಷಣಿಕ ಪದ್ಧತಿಯಲ್ಲಿ ಸರ್ಕಾರದ ಆದೇಶದಂತೆ ಎಲ್ಲಾ ಕೆಲಸಗಳನ್ನು ಶಿಕ್ಷಕರು ಮಾಡುತ್ತಾರೆ. ಸರ್ಕಾರಿ ಶಾಲೆ ಮಕ್ಕಳಿಗೆ ನಮ್ಮ ಮಕ್ಕಳೆಂಬ ಭಾವನೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಬಿ.ಎನ್ ಸುಂದ್ರೇಶ್ ವಹಿಸಿದ್ದರು.ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ವಿವಿಧ ಶಿಕ್ಷಕರ ಸಂಘಟನೆಗಳ ಮುಖಂಡರಾದ ಸುಮಿತ್ರ, ಚಂದ್ರೇಗೌಡ, ವಸಂತ ಕುಮಾರ್, ಪುಷ್ಪ, ಚಂದ್ರಯ್ಯ, ದಿನೇಶ್, ರಾಮದಾಸ್, ಅನ್ನಪೂರ್ಣ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಜೋಗಪ್ಪ ಸ್ವಾಗತಿಸಿದರು.
Donors distribute notebooks to students
Leave a comment