ಚಿಕ್ಕಮಗಳೂರು: ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಯ ಕ್ರಾಸ್ ಬಳಿ ಸೋಮವಾರ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಟಾಟಾ ಏಸ್ ವಾಹನದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ತೆರಳುತ್ತಿದ್ದ MH34 AB 7389 ನೋಂದಣಿಯ ಟಿಂಬರ್ ಲಾರಿಯ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ, KA22 Z 8919 ಬೈಕ್, KA18 TA 6734 ಓಮ್ನಿ, ಟ್ರ್ಯಾಕ್ಟರ್ ಹಾಗೂ KA13 C 7303 ಟಾಟಾ ಏಸ್ ಮತ್ತು KA09 AA 1823 ಅನಿಲ (ಗ್ಯಾಸ್) ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದಲ್ಲಿ ಟಾಟಾ ಏಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓಮ್ನಿ ಚಾಲಕ, ಅದರಲ್ಲಿದ್ದ ಪ್ರಯಾಣಿಕರು ಹಾಗೂ ಬೈಕ್ ಸವಾರ ಗಾಯಗೊಂಡಿದ್ದು, ಅವರನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.
112 ತುರ್ತು ಸೇವೆಗೆ ಚಂದನ್ ಎಂಬುವರು ಕರೆ ಮಾಡಿ ಅಪಘಾತದ ಮಾಹಿತಿ ನೀಡಿದ್ದರು. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 ಕಿ.ಮೀ. ಉದ್ದದ ವಾಹನ ದಟ್ಟಣೆ ಉಂಟಾಗಿದ್ದು, ಗ್ರಾಮಾಂತರ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ಸ್ಥಳದಲ್ಲೇ ಕಾರ್ಯಾಚರಣೆ ನಡೆಸಿ ಸಂಚಾರವನ್ನು ಸುಗಮಗೊಳಿಸಿದರು.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
Driver dies in horrific series of road accidents near Lakya Cross
Leave a comment