ಚಿಕ್ಕಮಗಳೂರು : ಸಾಮಾಜಿಕ ಜಾಲತಾಣದಲ್ಲಿ ದೇವಾಲಯದ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ರಫಿ ದೂರಿನ ಹಿನ್ನೆಲೆಯಲ್ಲಿ ಕಳಸ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ನಡುವೆ ಇಂದು ಅದರ ಜೊತೆಗೆ ಅದೇ ಪ್ರಕರಣ ಸಂಬಂಧ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ದೇವಸ್ಥಾನದ ಭಕ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹಿಂದೂ ದೇವಾಲಯಗಳ ಬಗ್ಗೆ ಅಂಜುಮ್ ಶೇಖ್ ಹೆಸರಿನಲ್ಲಿ ಶೃಂಗೇರಿ ಶಾರದಾಂಬೆ ದೇವಾಲಯ, ಕೊಲ್ಲೂರು ಮೂಕಾಂಬಿಕ, ತಿರುಪತಿ ತಿಮ್ಮಪ್ಪ, ಹೊರನಾಡು ಅನ್ನಪೂರ್ಣೇಶ್ವರಿ ಮತ್ತು ಗಣಪತಿ ದೇವರುಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ್ದಾನೆ.
ಇದು ಹಿಂದೂ ಮತ್ತು ಮುಸ್ಲಿಂಮರ ನಡುವೆ ಕೋಮುದ್ವೇಷವನ್ನು ಹಚ್ಚು ಹಾಕುವ ಉದ್ದೇಶದಿಂದ, ಎರಡು ಪಂಗಡಗಳ ನಡುವೆ ದ್ವೇಷ ಸೃಷ್ಠಿ ಮಾಡುವ ಕಾರಣದಿಂದ ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ. ಹೀಗಾಗಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಭಕ್ತರು ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Leave a comment