ಚಿಕ್ಕಮಗಳೂರು: ಇಂದಿನ ಋತುಮಾನಗಳ ವ್ಯತ್ಯಾಸ, ತಾಪಮಾನದ ಹೆಚ್ಚಳದಲ್ಲಿ ಪರಿಸರದ ಪಾತ್ರ ಮುಖ್ಯವಾಗಿದೆ. ಸ್ವಚ್ಛ, ಸುಂದರ ಪರಿಸರ ಕಾಪಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಹಸಿರು ಪರಿಸರ ಪ್ರೀತಿ ಹೆಚ್ಚಲು, ಪರಿಸರದೊಂದಿಗೆ ಬಾಂಧವ್ಯ ಬೆಳೆಯಲು ಮನೆಯ ಸುತ್ತಮುತ್ತ ಮರ-ಗಿಡಗಳನ್ನು ಬೆಳೆಸಬೇಕೆಂದು ಗೌರವಾನ್ವಿತ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಭಾನುಮತಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಆಯುಷ್ ಇಲಾಖೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
೧೯೭೨ರಲ್ಲಿ ವಿಶ್ವ ಸಂಸ್ಥೆ ವಿಶ್ವ ಪರಿಸರ ದಿನವನ್ನು ಘೋಷಿಸಿತು. ವಿಶ್ವದಾದ್ಯಂತ ಸುಮಾರು ೧೪೩ ದೇಶಗಳು ಇಂದು (ಜೂ.೫) ವಿಶ್ವ ಪರಿಸರ ದಿನವನ್ನು ಆಚರಿಸುತ್ತಿವೆ. ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದರು.
ಆಧುನಿಕ ಶೈಲಿಯಿಂದ ಪರಿಸರದ ಮೇಲೆ ಅನೇಕ ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿವೆ. ಪರಿಸರ ಕಾಳಜಿ, ಪ್ರತಿಯೊಬ್ಬರಲ್ಲೂ ಮೂಡಬೇಕು. `ಪ್ಲಾಸ್ಟಿಕ್ ತ್ಯಜಿಸಿ, ಪ್ಲಾಸ್ಟಿಕ್ ಬಳಸುವುದನ್ನು ಕೊನೆಗೊಳಿಸಿ’ ಎಂಬುದು ಈ ವರ್ಷದ ವಿಶ್ವ ಪರಿಸರ ದಿನಾಚರಣೆಯ ಧ್ಯೇಯವಾಕ್ಯವಾಗಿದೆ. ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವುದರಿಂದ ಗಿಡ-ಮರಗಳ ಬಗ್ಗೆ ಪ್ರೀತಿ ಹೆಚ್ಚಿ ಭವಿಷ್ಯದಲ್ಲಿ ಹಸಿರು ಪರಿಸರ, ಕಾಡು ಕಾಪಾಡಲು ಸಾಧ್ಯವಾಗುತ್ತದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಸುಜೇಂದ್ರ ಮಾತನಾಡಿ, ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕು. ಹಳೆಯ ಮತ್ತು ತ್ಯಾಜ್ಯ ಉತ್ಪನ್ನಗಳನ್ನು ಮರುಬಳಕೆ ಮಾಡಬೇಕು. ಮರಗಿಡಗಳನ್ನು ನೆಡುವ ಮೂಲಕ ಪರಿಸರ ಕಾಪಾಡುವಂತೆ ಹೇಳಿದ ಅವರು, ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮವನ್ನು ಬೆಳೆಸುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ ಪರಿಸರ ಸ್ವಚ್ಛತೆಗೆ ಕೈಜೋಡಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಮಾತನಾಡಿ, ಇಂದಿನ ದಿನಗಳಲ್ಲಿ ಮರಗಿಡಗಳನ್ನು ಕಡಿಯುತ್ತಿರುವುದರಿಂದ ಪರಿಸರದ ಅಸಮತೋಲನ ಉಂಟಾಗುತ್ತಿದೆ. ಇದರಿಂದ ಉಸಿರಾಡಲು ಪರಿಶುದ್ಧವಾದ ಗಾಳಿ ಸಿಗದಂತಹ ಸ್ಥಿತಿ ನಿರ್ಮಾಣವಾಗಿದೆ. ಪರಿಸರ ಸಮತೋಲನವನ್ನು ಕಾಪಾಡಲು ಹಾಗೂ ಮುಂದಿನ ಪೀಳಿಗೆಗೆ ಉತ್ತಮವಾದ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಯೊಬ್ಬರೂ ಮರಗಿಡಗಳನ್ನು ನೆಟ್ಟು ಪೋಷಿಸಬೇಕು ಎಂಬ ದೃಢ ಸಂಕಲ್ಪ ಮಾಡಿದರೆ ಉತ್ತಮವಾದ ಪರಿಸರವನ್ನು ಸೃಷ್ಟಿಸಲು ಸಾಧ್ಯ ಎಂದು ತಿಳಿಸಿದರು.
ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾದ ಭಾಗ್ಯಕ್ಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಾಧೀಶರುಗಳಾದ ಪ್ರಕಾಶ್ ವಿ., ಕುಲಕರ್ಣಿ ಗುರುಪ್ರಸಾದ್ ರಾಘವೇಂದ್ರ, ಕು.ಸುಜಾತ, ಎಸ್.ಬಿ.ದ್ಯಾವಪ್ಪ, ಜೆ.ಲತಾ, ಹೆಚ್.ಟಿ.ಅನುರಾಧ, ಕೆ.ಎಸ್.ಶರತ್ಕುಮಾರ್, ಎಸ್.ಆರ್.ನಂದಿನಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ, ಅರಣ್ಯ ಇಲಾಖೆ ಹಾಗೂ ಆಯುಷ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.
Everyone joins hands to plant trees and protect the environment.
Leave a comment