ಚಿಕ್ಕಮಗಳೂರು: ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಜನವರಿ ಮೊದಲ ವಾರದಲ್ಲಿ ರೈತ ಸಂಘದ ಜಿಲ್ಲಾ ಸಮಾವೇಶ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಹೇಶ್ ತಿಳಿಸಿದರು.
ಕಂದಾಯ ಮತ್ತು ಅರಣ್ಯ ಭೂಮಿ ಸಮಸ್ಯೆ ಬಗೆಹರಿಸಬೇಕು. ಅರಣ್ಯ ಕಾಯ್ದೆಗಳಿಗೆ ತಿದ್ದುಪಡಿ ತರಬೇಕು. ಅರಣ್ಯ ಮತ್ತು ಕಂದಾಯ ಭೂಮಿಗೆ ಜಂಟಿ ಸರ್ವೆ ನಡೆಸಿ ಕಂದಾಯ ಭೂಮಿಯನ್ನು ಗುರುತಿಸಬೇಕು. ಈ ಎಲ್ಲಾ ವಿಷಯಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಸುದ್ದಿಗೋಷ್ಠಿ ಯಲ್ಲಿ ಬುಧವಾರ ಹೇಳಿದರು.
ಸಮಾವೇಶದಲ್ಲಿ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕಾರ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಸಂಘದ ಪ್ರಧಾನ ಕಾರ್ಯದರ್ಶಿ ವಸಂತ್ಕುಮಾರ್, ಶಿವಾನಂದ ಕೊಗ್ವೆ ಭಾಗವಹಿಸಲಿದ್ದಾರೆ ಎಂದರು.
ಜಿಲ್ಲೆಯ ರೈತರು ಹಲವು ಸಮಸ್ಯೆಗಳ ನಡುವೆ ಬದುಕುತ್ತಿದ್ದಾರೆ. ಕುಡಿಯುವ ನೀರು ಮತ್ತು ವಾಸಕ್ಕೆ ಬೇಕಿರುವ ಮನೆ, ನಿವೇಶನಕ್ಕಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ. ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕು ಪತ್ರಕ್ಕಾಗಿ ನಮೂನೆ 50, 53, 57ರಲ್ಲಿ ಅರ್ಜಿ ಸಲ್ಲಿಸಿ ರೈತರು ಕಾಯುತ್ತಿದ್ದಾರೆ. ಆ ಅರ್ಜಿಗಳ ವಿಲೇವಾರಿ ಶೀಘ್ರವೇ ಆಗಬೇಕು. 5 ಎಕರೆ ಒಳಗಿನ ಬಡವರ ಒತ್ತುವರಿ ಭೂಮಿಯನ್ನು ಸಕ್ರಮ ಮಾಡಿ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.
ವಸತಿ, ಶಾಲೆ, ಕಾಲೇಜು, ಆಸ್ಪತ್ರೆ, ಸ್ಮಶಾನಕ್ಕೆ ಪ್ರತಿ ಗ್ರಾಮದಲ್ಲೂ ಭೂಮಿ ಕಾಯ್ದಿರಿಸಬೇಕು. ಅರಣ್ಯದ ಅಂಚಿನ ರೈತರಿಗೆ ಕಾಡುಪ್ರಾಣಿಗಳಿಂದ ಆಗುತ್ತಿರುವ ಪ್ರಾಣಹಾನಿ, ಬೆಳೆಹಾನಿ ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಪ್ರಾಣ ಹಾನಿಯಾದ ಕುಟುಂಬಗಳಿಗೆ ಏಕ ಕಂತಿನಲ್ಲಿ ಪರಿಹಾರ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಬಗ್ಗೆಯೂ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ಚಂದ್ರಶೇಖರ್, ಉಪಾಧ್ಯಕ್ಷ ಶಿವಕುಮಾರ್, ಮುಖಂಡರಾದ ಆನಂದಕುಮಾರ್, ದೇವರಾಜೇಗೌಡ, ಛಾಯಾಪತಿ ಇದ್ದರು.
Farmers’ Association district convention in the first week of January
Leave a comment