ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರ ಸೇವೆ ಮಾಡುವುದು ತಹಸೀಲ್ದಾರ್ ಅವರ ಪ್ರಮುಖ ಕರ್ತವ್ಯವಾಗಿದ್ದು, ಅದನ್ನು ಸಮರ್ಪಕವಾಗಿ ನಿರ್ವಹಿಸುವ ಬದಲು ಬೇರೆ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ನಿವೃತ್ತ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ತಾಲೂಕು ಕಚೇರಿಯ ಕಾರ್ಯವೈಖರಿಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ. ದಾಖಲೆಗಳನ್ನು ಬದಲಾವಣೆ ಮಾಡುವುದು, ತಿದ್ದುಪಡಿ ಮಾಡುವುದು ಸೇರಿದಂತೆ ವಿವಿಧ ರೀತಿಯ ಅಕ್ರಮಗಳು ನಡೆಯುತ್ತಿವೆ ಎಂಬ ಶಂಕೆ ವ್ಯಕ್ತವಾಗುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ನಿವೃತ್ತ ಅಧಿಕಾರಿಗಳು ತಾಲೂಕು ಕಚೇರಿ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದರಿಂದ ಸಾರ್ವಜನಿಕರು ಒತ್ತಡದ ನಡುವೆ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ತಹಸೀಲ್ದಾರ್ ಅವರ ಬೇಜವಾಬ್ದಾರಿ ಧೋರಣೆಯೇ ಕಾರಣ ಎಂದು ಅವರು ದೂರಿದ್ದಾರೆ.
ಇದೇ ವೇಳೆ ತಾಲೂಕು ಕಚೇರಿಯಲ್ಲಿ ಲಂಚದ ಹಾವಳಿ ಹೆಚ್ಚಾಗಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಏಜೆಂಟರನ್ನು ಬಳಸಿಕೊಂಡು ವಸೂಲಿ ದಂಧೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಅವರು, ತಹಸೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಿಬ್ಬಂದಿ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿಸಿದ್ದಾರೆ.
ಇಂತಹ ಘಟನೆಗಳಿಂದ ಸ್ಥಳೀಯ ಶಾಸಕರು ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಆದ್ದರಿಂದ ತಕ್ಷಣ ತಹಸೀಲ್ದಾರ್ ಅವರನ್ನು ವರ್ಗಾವಣೆ ಮಾಡಿ, ಸಾರ್ವಜನಿಕರಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
Former MLA Kumaraswamy upset against Tehsildar position
Leave a comment