ಚಿಕ್ಕಮಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಒಂದನೇ ತರಗತಿಯಿಂದ ೧೨ನೇ ತರಗತಿಯವರೆಗಿನ ಮಕ್ಕಳಿಗೆ ನೋಟು ಪುಸ್ತಕ ಹಾಗೂ ಪಠ್ಯ ಪುಸ್ತಕವನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.
ಕೊಪ್ಪ ತಾಲ್ಲೂಕು ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಈಗಾಗಲೇ ಶೂಗಳು, ಸಾಕ್ಸ್ಗಳು ಮತ್ತು ಸಮವಸ್ತ್ರ ನೀಡುವುದರ ಜೊತೆಗೆ ಪಠ್ಯಪುಸ್ತಕ ಹಾಗೂ ನೋಟ್ ಪುಸ್ತಕಗಳನ್ನು ಸಹ ನೀಡಲಾಗುತ್ತದೆ ಎಂದರು.
೮ನೇ ತರಗತಿಯವರೆಗಿನ ಮಕ್ಕಳಿಗೆ ಒಂದು ಮೊಟ್ಟೆ ಮಾತ್ರ ವಿತರಿಸಲಾಗುತ್ತಿತ್ತು. ಅದನ್ನು ನಮ್ಮ ಸರ್ಕಾರ ೧೦ನೇ ತರಗತಿಯವರೆಗೆ ವಿಸ್ತರಿಸಿದೆ. ಬಡ ಮಕ್ಕಳ ಅಪೌಷ್ಟಿಕತೆ ನೀಗಿಸುವ ಸಲುವಾಗಿ ಬೆಳಿಗ್ಗೆ ಹಾಲು ಹಾಗೂ ರಾಗಿ ಮಾಲ್ಟ್ ಜೊತೆಗೆ ವಾರವಿಡೀ ಮೊಟ್ಟೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಬಡತನಕ್ಕೆ ಸ್ಪಂದಿಸಿ ಕಾರ್ಯ ನಿರ್ವಹಿಸುವುದೇ ಸರ್ಕಾರದ ಕೆಲಸ. ಈ ನಿಟ್ಟಿನಲ್ಲಿ ೫೭ ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಜನರು ಆರ್ಥಿಕವಾಗಿ ಸಬಲರಾಗಲು ಅನುಕೂಲವಾಗುವಂತೆ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೆಯೇ ಯುವನಿಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಆಡಿದ ಮಾತು ಉಳಿಸಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ೧೧ ತಿಂಗಳಲ್ಲಿ ೧೩ ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ. ಇದೇ ಡಿಸೆಂಬರ್ ೭ ರಂದು ಟಿಇಟಿ ಪರೀಕ್ಷೆ ನಡೆಯಲಿದ್ದು, ಮತ್ತೆ ೧೨ ಸಾವಿರ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು. ಈ ಶೈಕ್ಷಣಿಕ ವರ್ಷ ಆರಂಭವಾದ ಸಂದರ್ಭದಲ್ಲೇ ೫೧ ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಕಾರ್ಯ ನಡೆದಿದೆ ಎಂದರು.
ಹಿಂದೆ ಎಸ್ಎಸ್ಎಲ್ಸಿಯ ಪರೀಕ್ಷಾ ಕ್ರಮದಲ್ಲಿ ಬದಲಾವಣೆ ತರಲಾಗಿದ್ದು, ಕಳೆದ ವರ್ಷ ಎರಡು ಮತ್ತು ಮೂರನೇ ಪರೀಕ್ಷೆ ನಡೆಸಿ ಅದರಲ್ಲಿ ಸುಮಾರು ೧,೧೬,೦೦೦ ಮಕ್ಕಳು ಉತ್ತೀರ್ಣರಾಗಿ ಇವತ್ತು ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿದ್ದಾರೆ. ೨೦೨೪ ರಲ್ಲಿ ಇಬ್ಬರು ಮಾತ್ರ ೬೨೫ಕ್ಕೆ ೬೨೫ ಅಂಕ ಪಡೆದಿದ್ದರು. ಆದರೆ ಈ ಬಾರಿ ಈ ಸಂಖ್ಯೆ ೫೧ಕ್ಕೆ ಏರಿದೆ. ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದರಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಒಂದು ಗ್ರಾ.ಪಂ. ವ್ಯಾಪ್ತಿಗೆ ಒಂದರಂತೆ ಇಡೀ ರಾಜ್ಯಕ್ಕೆ ೬ ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಸ್ಥಾಪಿಸಬೇಕೆಂಬ ಉದ್ದೇಶ ಸರ್ಕಾರದ್ದು. ಜೊತೆಗೆ ಆ ಶಾಲೆಗಳ ವಿದ್ಯಾರ್ಥಿಗಳಿಗೆ ಎಲ್ಕೆಜಿಯಿಂದ ೧೨ನೇ ತರಗತಿಯವರೆಗೆ ಉಚಿತ ಬಸ್ ವ್ಯವಸ್ಥೆಯೂ ಲಭ್ಯವಿರುತ್ತದೆ ಎಂದು ತಿಳಿಸಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಮಾತನಾಡಿ, ಸುಮಾರು ೪೫ ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಗ್ರಾ.ಪಂ.ಯ ಕಟ್ಟಡ, ಸುಮಾರು ೧೦ ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕಟ್ಟಡ, ೮೨ ಲಕ್ಷ ರೂ.ಗಳ ವೆಚ್ಚದಲ್ಲಿ ಐದು ಶಾಲಾ ಕೊಠಡಿಗಳನ್ನು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿದ್ದಾರೆ.
ಸಚಿವರಾದ ಮಧು ಬಂಗಾರಪ್ಪನವರು ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆಮೂಲಾಗ್ರ ಬದಲಾವಣೆ ತಂದಿದ್ದಾರೆ. ಇಂದು ಖಾಸಗಿ ಉದ್ಯಮಿಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಲು ಮಂದೆ ಬರಲು ಸಿದ್ಧರಿದ್ದಾರೆ. ಅದರಲ್ಲೂ ಅಜೀಂ ಪ್ರೇಮ್ಜಿ ಫೌಂಡೇಶನ್ನ ಸಹಯೋಗದಲ್ಲಿ ಸುಮಾರು ೧೫೬೦ ಕೋಟಿ ರೂ.ಗಳ ಆರ್ಥಿಕ ನೆರವು ತಂದಿದ್ದು, ವಾರದಲ್ಲಿ ಆರು ದಿನಗಳ ಕಾಲ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ರಾಗಿ ಮಾಲ್ಟ್ ನೀಡುವ ಯೋಜನೆ ರೂಪಿಸಲಾಗಿದೆ. ಇದು ಸಚಿವರಾದ ಮಧು ಬಂಗಾರಪ್ಪ ಅವರ ಪ್ರಯತ್ನದಿಂದ ಆಗಿದೆ ಎಂದರು.
ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ, ಕರ್ಕೇಶ್ವರ ಗ್ರಾ,ಪಂ. ಅಧ್ಯಕ್ಷ ರಾಜೇಶ್ ಕೇಶವತ್ತಿ, ಉಪಾಧ್ಯಕ್ಷೆ ಆಶಾಲತ, ಎಸ್ಡಿಎಂಸಿ ಅಧ್ಯಕ್ಷೆ ಮಮತ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮರಾಜು, ಗ್ರಾ.ಪಂ.ಸದಸ್ಯರುಗಳು ಮತ್ತಿತರರು ಕಾರ್ಯಕ್ರಮದಲ್ಲಿದ್ದರು.
Free textbooks and notebooks to be distributed to children from the next academic year
Leave a comment