ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ ಪೀಠ, ಮರು ಮತ ಎಣಿಕೆ ಫಲಿತಾಂಶವನ್ನು ಪ್ರಕಟಿಸಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದೆ.
2021ರ ಡಿಸೆಂಬರ್ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ಕೆ. ಪ್ರಾಣೇಶ್ ಅವರು 1,188 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರನ್ನು ಕೇವಲ 6 ಮತಗಳ ಅಂತರದಿಂದ ಸೋಲಿಸಿದ್ದರು. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನು ಪಡೆದಿದ್ದರು.
ಆದರೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ಹಾಗೂ ಮೂಡಿಗೆರೆ ಪಟ್ಟಣ ಪಂಚಾಯಿತಿಗಳ ನಾಮನಿರ್ದೇಶಿತ ಸದಸ್ಯರು ಮತದಾನಕ್ಕೆ ಅರ್ಹರಲ್ಲದಿದ್ದರೂ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿ ಗಾಯತ್ರಿ ಶಾಂತೇಗೌಡ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಚುನಾವಣಾ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಆದೇಶದಂತೆ ಮರು ಮತ ಎಣಿಕೆ ನಡೆಸಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು. ಅಂತಿಮ ವಿಚಾರಣೆಯ ನಂತರ ಇಂದು ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರು ಮರು ಮತ ಎಣಿಕೆ ಫಲಿತಾಂಶವನ್ನು ಪ್ರಕಟಿಸಿ, ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ವಿಜೇತರಾಗಿದ್ದಾರೆ ಎಂದು ಘೋಷಿಸಿದರು.
ಇದರೊಂದಿಗೆ ಎಂ.ಕೆ. ಪ್ರಾಣೇಶ್ ಅವರ ಆಯ್ಕೆಯನ್ನು ಅಮಾನ್ಯಗೊಳಿಸಿ, ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾಗಿ ಗಾಯತ್ರಿ ಶಾಂತೇಗೌಡ ಅವರನ್ನು ಹೈಕೋರ್ಟ್ ಘೋಷಿಸಿದೆ.
ಹೈಕೋರ್ಟ್ ತೀರ್ಪಿನಿಂದ ಜಿಲ್ಲೆಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿತ್ವದಲ್ಲಿ ಬದಲಾವಣೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳತ್ತ ಈಗ ಎಲ್ಲರ ಗಮನ ನೆಟ್ಟಿದೆ.
Gayatri Shantegowda wins by 9 votes in recount
Leave a comment