ಕೊಪ್ಪ: ಮಗಳ ಸಾಂಸ್ಕೃತಿಕ ಕಾರ್ಯಕ್ರಮ ಕಣ್ಣುಂಬಿಕೊಳ್ಳಲು ಇಡೀ ಕುಟುಂಬವೇ ಸಂಭ್ರಮದಿಂದ ಶಾಲೆಗೆ ತೆರಳಿದ್ದ ವೇಳೆ, ಖದೀಮರು ಮನೆಗೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕೊಪ್ಪ ತಾಲೂಕಿನ ಕುಂದೂರು ಎಲೆಮಡಿಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಗ್ರಾಮದ ನಿವಾಸಿ ವೀಣಾ ಎಂಬುವವರು ತಮ್ಮ ಮಗಳ ಶಾಲೆಯಲ್ಲಿ ಆಯೋಜಿಸಲಾಗಿದ್ದ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಸೆಪ್ಟೆಂಬರ್ 14ರ ಸಂಜೆ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ತೆರಳಿದ್ದರು. ಸಂಭ್ರಮ ಮುಗಿಸಿ ರಾತ್ರಿ ಮನೆಗೆ ಮರಳಿದಾಗ ಮನೆಯ ಹಿಂಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದ್ದು, ಒಳಗೆ ತೆರಳಿ ನೋಡಿದಾಗ ಕಳ್ಳರ ಕೈಚಳಕ ಬಯಲಾಗಿದೆ.
ಕೊಠಡಿಯಲ್ಲಿದ್ದ ಗಾರ್ಡೇಜ್ ಬೀರುವಿನಲ್ಲಿದ್ದ ಸುಮಾರು 24 ಗ್ರಾಂ ತೂಕದ ಒಂದು ಜೊತೆ ಚಿನ್ನದ ಬಳೆಗಳು ಹಾಗೂ 8 ಗ್ರಾಂ ತೂಕದ ಚಿನ್ನದ ಓಲೆಗಳು ನಾಪತ್ತೆಯಾಗಿದ್ದು, ಕಳವಾದ ಆಭರಣಗಳ ಒಟ್ಟು ಮೌಲ್ಯ ಅಂದಾಜು 5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಯಾರೂ ಇಲ್ಲದ ಸಮಯ ಸಾಧಿಸಿ ಹಿಂಬಾಗಿಲಿನ ಮೂಲಕ ಒಳನುಗ್ಗಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
Gold jewelry worth lakhs of rupees stolen after breaking into a house.
Leave a comment