ಚಿಕ್ಕಮಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ನೀಡುವ ನಿರ್ದೇಶನಗಳನ್ನು ಸಕಾಲದಲ್ಲಿ ಛಾಚು ತಪ್ಪದೆ ಪಾಲಿಸಿದಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರಾದ ಕೆ.ಮಂಜುಳ ಅಭಿಪ್ರಾಯಿಸಿದರು.
ಶುಕ್ರವಾರ ನಗರದ ಟೌನ್ ಮಹಿಳಾ ಸಮಾಜದ ಎಂ.ಎಲ್.ವಿ ರೋಟರಿ ಹಾಲ್ನಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದಿಂದ ಹಮ್ಮಿಕೊಂಡಿದ್ದ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಗ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದ ಶಿಕ್ಷಣ ಇಲಾಖೆ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸುಧಾರಣೆ ತರುವ ನಿಟ್ಟಿನಲ್ಲಿ ಅನೇಕ ನಿರ್ದೇಶನಗಳನ್ನು ಕಾಲ ಕಾಲಕ್ಕೆ ನೀಡುತ್ತಿದ್ದು, ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕರು ನಿರ್ದೇಶನಗಳನ್ನು ಪಾಲಿಸುವುದರಿಂದ ಕಾಲೇಜಿನಲ್ಲಿ ಉತ್ತಮ ಫಲಿತಾಂಶವನ್ನು ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದರು.
ರಾಜ್ಯ ಶಿಕ್ಷಣ ಇಲಾಖೆ ಹಾಜರಾತಿ ವಿಚಾರದಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿದ್ದು, ಕಾಮ್ಸ್, ನಿರಂತರ, ಸ್ಯಾಟ್ಸ್ ಪದ್ಧತಿಯನ್ನು ಜಾರಿಗೊಳಿಸಿದ್ದು, ಕರ್ತವ್ಯ ಕ್ಷೇತ್ರದಲ್ಲಿ ನಿಷ್ಟೆ ಮತ್ತು ಪ್ರಾಮಾಣಿಕತೆಯನ್ನು ತೋರಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಜೆ.ಜಿ.ಸುರೇಂದ್ರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ಕಾಲೇಜುಗಳ ಸೇವೆ ಸಲ್ಲಿಸುವ ಅವಕಾಶ ದೊರೆತ್ತಿರುವುದು ನನ್ನ ಪುಣ್ಯ. ಇದು ಅಧ್ಯಕ್ಷ ಸ್ಥಾನದ ಮಾತು ಎನ್ನುವುದಕ್ಕಿಂತ ಸಹಕರಿಸಿದ ಎಲ್ಲಾರಿಗೂ ಕೃತಜ್ಞತೆ ಮಾತುಗಳು ಎಂದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಉಪನಿರ್ದೇಶಕರ ಮಾರ್ಗದರ್ಶನದಿಂದ ಮಾತ್ರ ಈ ಸ್ಥಾನದಲ್ಲಿ ಯಶಸ್ಸುಗಳಿಸಲು ಸಾಧ್ಯವಾಗಿದೆ. ನಮ್ಮ ಕನಸ್ಸುಗಳನ್ನು ಪೋಷಿಸಿದ್ದರಿಂದ ಒಳ್ಳೇಯ ಫಲಿತಾಂಶ ಪಡೆದುಕೊಳ್ಳಲು ಸಾಧ್ಯವಾಗಿದೆ. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಇದೇ ವೇಳೆ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಒಂಭತ್ತು ಜನ ಪ್ರಾಂಶುಪಾಲರಿಗೆ ಸನ್ಮಾನಿಸಲಾಯಿತು. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಸರ್ಕಾರಿ ಕಾಲೇಜುಗಳ ಮೂವತ್ತಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಡೂರು ಪಟ್ಟಣದ ಪಿ.ಆರ್.ಕಾಲೇಜಿನ ಪ್ರಾಂಶುಪಾಲ ರವಿಪ್ರಕಾಶ್ ಅವರು ಸರ್ಕಾರಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹತ್ತು ಸಾವಿರ ರೂ. ನಗದು ಬಹುಮಾನ ನೀಡಿದರು.
ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಬಳಿಕ ಪದವಿ ಪೂರ್ವ ಕಾಲೇಝುಗಳ ಪ್ರಾಚಾರ್ಯರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಜಿ.ಬಿ.ವಿರೂಪಾಕ್ಷ, ಖಜಾಂಚಿ ಎಂ.ಎಲ್.ಸೋಮಶೇಖರ್, ರಾಜ್ಯ ಪ್ರಾಂಶುಪಾಲರ ಸಂಘದ ಜಿಲ್ಲಾ ಪ್ರತಿನಿಧಿ ಡಾ|ಎಸ್.ಎಸ್.ತವರಾಜ್, ಪ್ರಾಂಶುಪಾಲ ಮಂಜುನಾಥ್ ಇದ್ದರು. ಜಿಜೆಸಿ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಜಿ.ಬಿ.ವಿರೂಪಾಕ್ಷ ಸ್ವಾಗತಿಸಿದರು. ಬಿ.ಮಹೇಶ್ ನಿರೂಪಿಸಿದರು.
Good results can be achieved if the department’s directions are followed.
Leave a comment