ಚಿಕ್ಕಮಗಳೂರು: ಮಕ್ಕಳು ಈ ದೇಶದ ನಿಜವಾದ ಆಸ್ತಿ, ಅವರನ್ನು ಸಂರಕ್ಷಿಸುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ, ಮಕ್ಕಳ ರಕ್ಷಣೆಗಾಗಿ ಇರುವ ಯೋಜನೆಗಳು ಹಾಗೂ ಕಾಯ್ದೆಗಳನ್ನು ಅರಿತುಕೊಂಡು ಎಲ್ಲಾ ಇಲಾಖೆಗಳ ಸಂಯೋಜನೆಯೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ತಿಳಿಸಿದರು.
ಇಂದು ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಂದಾಯ, ಕಾರ್ಮಿಕ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಇಲಾಖೆಗಳು ಒಂದು ತಂಡದ ರೀತಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಫೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿ?ಧ ಕಾಯ್ದೆ, ಭ್ರೂಣ ಹತ್ಯೆ ನಿ?ಧ ಕಾಯ್ದೆ, ಮಕ್ಕಳ ಮಾರಾಟ ನಿ?ಧ ಕಾಯ್ದೆ -ಈ ಕಾಯ್ದೆಗಳನ್ನು ಮಕ್ಕಳ ಸಂರಕ್ಷಣೆಗಾಗಿ ಸರ್ಕಾರ ಕಾನೂನು ಜಾರಿಗೆ ತಂದಿದೆ. ಅಭಿವೃದ್ಧಿ ಆಯೋಗದ ನೇತೃತ್ವದಲ್ಲಿ ಬಾಲ್ಯ ವಿವಾಹ ತಡೆ ಕಾಯ್ದೆ ರಾಜ್ಯ ಮಟ್ಟದಲ್ಲಿ ಮಾತ್ರ ಇದೆ. ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಮಟ್ಟದಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಸಮಿತಿಗಳು ಆಸ್ತಿತ್ವದಲ್ಲಿವೆ. ತಾಲ್ಲೂಕು ಮಟ್ಟದ ಸಮಿತಿ ಸಭೆಗಳು ೩ ತಿಂಗಳಿಗೊಮ್ಮೆ ತಹಶೀಲ್ದಾರ್ ನೇತೃತ್ವದಲ್ಲಿ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಹೇಳಿದರು.
ಅಭಿವೃದ್ಧಿ ಯೋಜನಾಧಿಕಾರಿ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಸೇರಿ ಸಭೆಯನ್ನು ನಡೆಸಿ, ತಮ್ಮ ಕಾರ್ಯ ವ್ಯಾಪ್ತಿಯ ಸ್ಥಿತಿಗತಿಗಳನ್ನು ಅರಿತುಕೊಂಡು ಬಾಲ್ಯ ವಿವಾಹ ಪ್ರಯತ್ನಗಳನ್ನು ಪರಿಣಾಮಕಾರಿಯಾಗಿ ತಡೆಯಬೇಕು. ಒಂದು ವೇಳೆ ಬಾಲ್ಯವಿವಾಹ ನಡೆದಿದ್ದರೆ ಅದಕ್ಕೆ ಪ್ರೋತ್ಸಾಹಿಸಿದ ಪೋ?ಕರು, ಸಂಬಂಧಿಕರು, ಕಲ್ಯಾಣ ಮಂಟಪದ ಮಾಲೀಕರು, ಪುರೋಹಿತರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು ಹಾಗೂ ಅಂತಹ ಮಕ್ಕಳ ಪುನರ್ ವಸತಿಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಮಾತನಾಡಿ ಮೆಸ್ಕಾಂ ಅಧಿಕಾರಿಗಳಿಗೆ ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಶಾಲೆ, ಅಂಗನವಾಡಿ, ವಸತಿ ನಿಲಯಗಳ ಮೇಲಿನ ವಿದ್ಯುತ್ ತಂತಿಗಳಿಂದಾಗುವ ಅಪಾಯ ತಪ್ಪಿಸುವಂತೆ ಸೂಚಿಸಿದರು.
ಕೃಷಿ ಹೊಂಡ, ಕೆರೆ, ಕಟ್ಟೆ, ಬಾವಿಗಳಲ್ಲಿ ಮಕ್ಕಳು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಇಂತಹ ಘಟನೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಯೋಗದ ಇನ್ನೋರ್ವ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿರುವ ಶಿಶು ಆರೈಕೆ ಗೃಹಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳನ್ನು ಅವಲಂಬಿಸದೆ ಸರ್ಕಾರಿ ಆಸ್ಪತ್ರೆಯಲ್ಲಿರುವ ವ್ಯವಸ್ಥೆಯನ್ನೇ ಬಳಸಿಕೊಳ್ಳವಂತೆ ಸೂಚಿಸಿದರು.
ಮಹಿಳಾ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಗಾಗಿ ಬಯೋಮೆಟ್ರಿಕ್ಗಳನ್ನು ಕಡ್ಡಾಯವಾಗಿ ಆಳವಡಿಸುವಂತೆ ಹಾಗೂ ಪೌಷ್ಟಿಕಾಂಶ, ಶುಚಿ-ರುಚಿಯಾದ ಆಹಾರವನ್ನು ನೀಡುವುದರ ಜೊತೆಗೆ ಸ್ನಾನಗೃಹಗಳಲ್ಲಿ ಬಿಸಿ ನೀರಿನ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಿ ಚರ್ಮ ರೋಗ ಬಾರದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಮಂಜು, ವೆಂಕಟೇಶ್, ಅಪರ್ಣಾ ಎಮ್.ಕೊಳ್ಳಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
It is everyone’s responsibility to protect the country’s children its assets.
Leave a comment