ಚಿಕ್ಕಮಗಳೂರು: ಗ್ರಾಮ ಮಟ್ಟದಲ್ಲಿ ನಡೆಯುವ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಪ್ರಕರಣ ತಡೆಗಟ್ಟುವುದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಕರ್ತವ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ತಿಳಿಸಿದರು.
ಜಿಲ್ಲೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ಜಿಲ್ಲಾ ಮಟ್ಟದ ವೃತ್ತಿ ಬುನಾದಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳನ್ನು ಬಾಲ್ಯದಲ್ಲೇ ಮದುವೆ ಮಾಡುವುದು ಅಪರಾಧ. ಈ ಕುರಿತು ಗ್ರಾಮೀಣ ಜನರಿಗೆ ಮನವರಿಕೆ ಮಾಡಿಕೊಡಬೇಕು. ಆ ಮೂಲಕ ಮಕ್ಕಳ ಮೇಲಿನ ದೌರ್ಜನ್ಯ ತಡೆಯಬೇಕು ಎಂದರು.
‘ಆಯ್ಕೆ ಆದವರಲ್ಲಿ ಹೆಚ್ಚಿನವರು ಯುವತಿಯರಾಗಿದ್ದು, ಸಮಾಜದಲ್ಲಿ ನಿಮ್ಮ ಸೇವೆ ಅಗತ್ಯತೆ ಹಾಗೂ ಅನಿವಾರ್ಯತೆ ಎರಡೂ ನಿರಂತರವಾಗಿದೆ. ಫಲಾನುಭವಿಗಳಿಗೆ ಇಲಾಖೆಯ ಸೇವೆಗಳ ಬಗ್ಗೆ ತಿಳಿವಳಿಕೆ ನೀಡಬೇಕು. 6 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಣೆ, ಶಾಲಾ ಪೂರ್ವ ಶಿಕ್ಷಣ, ಚುಚ್ಚುಮದ್ದು, ಆರೋಗ್ಯ ತಪಾಸಣೆ, ಮಾಹಿತಿ ಸೇವೆ, ಪೌಷ್ಟಿಕತೆ ಹಾಗೂ ಆರೋಗ್ಯ ಶಿಕ್ಷಣ ಸೇವೆಗಳನ್ನು ಫಲಾನುಭವಿಗಳಿಗೆ ಒದಗಿಸುವುದು ನಿಮ್ಮ ಜವಾಬ್ದಾರಿ’ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ಮಾತನಾಡಿ, ‘ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಅಂಗನವಾಡಿ ಕೇಂದ್ರಗಳಲ್ಲಿ ಯಾವ ರೀತಿ ಕಾರ್ಯನಿರ್ವಹಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ಹೇಗೆ ತಲುಪಿಸಬೇಕು ಎಂಬುದರ ಕುರಿತು ಮಾಹಿತಿ ನೀಡಲು ವೃತ್ತಿ ಬುನಾದಿ ತರಬೇತಿ ಕಾರ್ಯಕ್ರಮ ಪ್ರಮುಖವಾಗಿದೆ’ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್, ಚಿಕ್ಕಮಗಳೂರು, ತರೀಕೆರೆ, ಕಡೂರು, ನರಸಿಂಹರಾಜಪುರ ಹಾಗೂ ಶೃಂಗೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.
It is the duty of Anganwadi workers to prevent child marriage at the village level.
Leave a comment